ADVERTISEMENT

ಬೆಳಗಾವಿಯ 50 ವಾರ್ಡ್‌ಗಳಲ್ಲಿ ಬಿಜೆಪಿಗೆ ಜಯ: ಸಚಿವ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 15:25 IST
Last Updated 29 ಆಗಸ್ಟ್ 2021, 15:25 IST
ಸಚಿವ ಗೋವಿಂದ ಕಾರಜೋಳ
ಸಚಿವ ಗೋವಿಂದ ಕಾರಜೋಳ   

ಬೆಳಗಾವಿ: ‘ನಗರದಲ್ಲಿ ಬಿಜೆಪಿ ಶಾಸಕರು ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ವಿಶೇಷವಾಗಿ ಕೊಳೆಗೇರಿ ಮಂಡಳಿಯಿಂದ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಟ್ಟಿದ್ದಾರೆ. ಇದರಿಂದಾಗಿ, ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ವೇಳೆ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿಗಳಿಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸ್ಥಳೀಯ ಚುನಾವಣೆಗಳನ್ನೂ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಇವು ಪಕ್ಷದ ಅಡಿಪಾಯ ಮತ್ತು ಕಾರ್ಯಕರ್ತರ ಬಲ ಹೆಚ್ಚಿಸುತ್ತವೆ. ಬೆಂಗಳೂರಿನಿಂದ ಹಲವು ಮುಖಂಡರು ಪ್ರಚಾರಕ್ಕೆ ಬಂದಿದ್ದಾರೆ’ ಎಂದು ತಿಳಿಸಿದರು.

ADVERTISEMENT

ದಕ್ಷಿಣ ಮತಕ್ಷೇತ್ರದ ನಾಥ್ ಪೈ ವೃತ್ತದಿಂದ ಆರಂಭಿಸಿದ ಸಚಿವರು, ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಯಾಚಿಸಿದರು. ಬಸವೇಶ್ವರ ವೃತ್ತ, ಖಾಸಬಾಗ್‌ ಮಾರುತಿ ಗಲ್ಲಿ, ಹಳೇ ಪಿ.ಬಿ. ರಸ್ತೆಯ ಪಾಟೀಲ, ವಡಗಾವಿ ಡೋರ ಗಲ್ಲಿ ಮೊದಲಾದ ಕಡೆಗಳಲ್ಲಿ ಪ್ರಚಾರ ನಡೆಸಿದರು. ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಜೊತೆಗಿದ್ದರು.

ಡೋರಗಲ್ಲಿಯ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರಚಾರ ಸಭೆ ನಡೆಸಿದರು. ‘ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ಆಡಳಿತಕ್ಕೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರ ಯೋಜನೆಗಳು ಜನಮನ ಗೆದ್ದಿವೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಅಭಿವೃದ್ಧಿಗೆ ಹೆಚ್ಚು ವೇಗ ದೊರೆಯಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.