ADVERTISEMENT

ಬೆಳಗಾವಿ | ಸ್ವಚ್ಛತೆ ಕಾಪಾಡದಿದ್ದರೆ ಕ್ರಮ: ಶಿಂಧೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 15:41 IST
Last Updated 9 ಫೆಬ್ರುವರಿ 2024, 15:41 IST
ರಾಹುಲ್‌ ಶಿಂಧೆ
ರಾಹುಲ್‌ ಶಿಂಧೆ   

ಬೆಳಗಾವಿ: ‘ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳು ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುವುದು. ಆಗ ಶೌಚಗೃಹ, ಮೂತ್ರಾಲಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು ಕಂಡುಬಂದರೆ, ಸಂಬಂಧಿತ ಮುಖ್ಯಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು.

ಇಲ್ಲಿನ ಡಿಡಿಪಿಐ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಣ ಇಲಾಖೆಯ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬೆಳಗಾವಿ ನಗರ ವಲಯದಲ್ಲಿ ಶೌಚಗೃಹ ಅಗತ್ಯವಿರುವ ಶಾಲೆಗಳ ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯ ಹೊಂದಿರದ ಶಾಲೆಗಳ ಮಾಹಿತಿಯನ್ನೂ ಸಿದ್ಧಪಡಿಸಿ, ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು’ ಎಂದು ಸೂಚಿಸಿದರು.

ADVERTISEMENT

‘ಯಾವುದಾದರೂ ಶಾಲೆಯಲ್ಲಿ ಬೇಡಿಕೆಗಿಂತ ಹೆಚ್ಚು ಡೆಸ್ಕ್‌ಗಳಿದ್ದರೆ, ಅಗತ್ಯವಿರುವ ಶಾಲೆಗಳಿಗೆ ಅವುಗಳನ್ನು ಹಸ್ತಾಂತರಿಸಲು ಕ್ರಮ ವಹಿಸಬೇಕು. ಇದಕ್ಕಾಗಿ ವಿಶೇಷ ತಂಡ ರಚಿಸಿ, ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ವಿಶೇಷ ತರಗತಿ ಕೈಗೊಳ್ಳಬೇಕು. ಫಲಿತಾಂಶ ಹೆಚ್ಚಿಸಲು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ಡಿಡಿಪಿಐ ಮೋಹನಕುಮಾರ ಹಂಚಾಟೆ, ಡಿಡಿಪಿಯು ಎಂ.ಎಂ.ಕಾಂಬಳೆ, ಎಸ್.ಡಿ.ಗಾಂಜಿ, ಬಸವರಾಜ ಮಿಲ್ಲಾನಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.