ಬೆಳಗಾವಿ: 'ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಮ್ಮ ಪರವಾದ ವಾತಾವರಣ ಇದೆ. ಎರಡೂ ಕಡೆಗಳಲ್ಲೂ ಬಿಜೆಪಿ ಹೆಚ್ಚಿನ ಮತಗಳನ್ನು ಗಳಿಸಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಶ್ವಾಸ ವ್ಯಕ್ತಪಡಿಸಿದರು.
ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಗಿಸಿ ಮಂಗಳವಾರ ತಡರಾತ್ರಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಅವರು ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ತೆರಳುವುದಕ್ಕೆ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು.
'ಬೆಂಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತೇನೆ. ಸಂಜೆ ಹಾನಗಲ್ಗೆ ಬರುತ್ತೇನೆ. ಮೂರು ದಿನ ಪ್ರಚಾರ ಮಾಡುತ್ತೇನೆ. ಅ. 23ಕ್ಕೆ ಕಿತ್ತೂರಿನಲ್ಲಿ ನಡೆಯುವ ಕಿತ್ತೂರು ಉತ್ಸವದಲ್ಲಿ ಭಾಗಿಯಾಗಲು ಬೆಳಗಾವಿಗೆ ಬರುತ್ತೇನೆ' ಎಂದರು.
'ಮುಂಬೈ ಕರ್ನಾಟಕವನ್ನು
ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ ಆಗಬೇಕಾಗುತ್ತದೆ. ಆ ಬಗ್ಗೆ ನೋಡೋಣ' ಎಂದು ಪ್ರತಿಕ್ರಿಯಿಸಿದರು.
ಬೆಳಗಾವಿಯಲ್ಲಿ ರಾಜ್ಯೋತ್ಸವದಂದು ಅದ್ಧೂರಿ ಮೆರವಣಿಗೆಗೆ ಅವಕಾಶ ಕೊಡಬೇಕೆಂದು ಕನ್ನಡ ಸಂಘಟನೆಗಳು ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಮೆರವಣಿಗೆಗಳಿಗೆ ಅವಕಾಶ ಕೊಡುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ' ಎಂದರು.
ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತ ಪ್ರಶ್ನೆಗೆ ಉತ್ತರ ನೀಡದೆ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.