ಬೆಳಗಾವಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಗುರುವಾರ ನಗರದಲ್ಲಿ ಆರಂಭಿಸಿರುವ ಜಿಲ್ಲಾ ಕೋವಿಡ್ ವಾರ್ ರೂಂ, ಬಿಮ್ಸ್ ಆಸ್ಪತ್ರೆ, ಲಸಿಕಾಕರಣ ಘಟಕ ಹಾಗೂ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ವ್ಯವಸ್ಥೆಯನ್ನು ಅವಲೋಕಿಸಿದರು.
ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಹಾಸಿಗೆಗಳ ಲಭ್ಯತೆ, ಜಿಲ್ಲೆಯಲ್ಲಿ ಲಭ್ಯವಿರುವ ಆಮ್ಲಜನಕ ಹಾಸಿಗೆಗಳು, ವೆಂಟಿಲೇಟರ್ ಮತ್ತು ಆಮ್ಲಜನಕ ಸಂಗ್ರಹ ಸಾಮರ್ಥ್ಯದ ಬಗ್ಗೆ ಮಾಹಿತಿ ಪಡೆದರು. ‘ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿನ ವಾರ್ ರೂಂ ನಡುವೆ ಸಮನ್ವಯತೆ ಸಾಧಿಸಿ ಸೋಂಕಿತರ ಚಿಕಿತ್ಸೆ ಹಾಗೂ ಐಸೊಲೇಷನ್ ಮೇಲೆ ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದರು.
‘ಬಿಮ್ಸ್ ಸೇರಿದಂತೆ ಸೇರಿದಂತೆ ಯಾವುದೇ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಜತೆ ಆಸ್ಪತ್ರೆಯಲ್ಲಿ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹಾಯಕರಿರುವುದು ಕಂಡುಬಂದಲ್ಲಿ ಅದಕ್ಕೆ ಆಯಾ ಆಸ್ಪತ್ರೆಯ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
‘ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಯಾವುದೇ ಅವ್ಯವಸ್ಥೆ ಕಂಡುಬಂದರೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.