
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದಿಂದ ಕಾಂಗ್ರೆಸ್ ಸರ್ಕಾರದ ಹಗರಣ ಕುರಿತ ಭಿತ್ತಿಪತ್ರಗಳನ್ನು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಬಿಡುಗಡೆ ಮಾಡಿದರು. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಸಂಜಯ ಪಾಟೀಲ, ಸತೀಶ ಅಪ್ಪಾಜಿಗೋಳ ಭಾಗವಹಿಸಿದ್ದರು
ಚಿಕ್ಕೋಡಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಸಾವಿರ ದಿನಗಳ ಆಡಳಿತವನ್ನು ಹಬ್ಬದಂತೆ ಆಚರಿಸಲು ಹೊರಟಿದ್ದು, ಇದು ಹಬ್ಬವಲ್ಲ. ಸಾವಿರ ಹಗರಣಗಳ, ಸಾವಿರ ವೈಫಲ್ಯಗಳ, ಸಾವಿರ ಸುಳ್ಳುಗಳ ಅಧ್ಯಾಯವಾಗಿದೆ’ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕಿಡಿಕಾರಿದರು.
ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸರ್ಕಾರದ ಹಗರಣ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಹೇಳಿದ ‘ಗ್ಯಾರಂಟಿ’ ಎಂಬ ಬಣ್ಣದ ಮಾತು ಜನರ ಪಾಲಿಗೆ ಮರೀಚಿಕೆಯಾಗಿದೆ. ಉಚಿತ ಉಚಿತ ಎಂದು ಹೇಳುತ್ತಾ, ಪೆಟ್ರೋಲ್, ಡೀಸೆಲ್, ಹಾಲು, ವಿದ್ಯುತ್, ದಿನಸಿ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ, ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿದರು.
‘ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಬುಡಾ ಹಗರಣ, ದಲಿತರ ಹಣ ಲೂಟಿ, ಅಪರಾಧ, ವರ್ಗಾವಣೆ ದಂಧೆ, ಅಬಕಾರಿ ಹಗರಣ...ಹೀಗೆ ಒಂದಾದ ಮೇಲೊಂದು ಹಗರಣಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಹಗರಣಗಳ ಗೂಡಾಗಿದೆ’ ಎಂದರು.
ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮಂಡಲ ಅಧ್ಯಕ್ಷ ರಾಜು ಗುಂದೇಶಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.