ADVERTISEMENT

ಚಿಕ್ಕೋಡಿ | ಉ‍ಪಾಹಾರ ಸೇವನೆ: 84 ವಿದ್ಯಾರ್ಥಿಗಳು ಅಸ್ವಸ್ಥ, ಬಾಲಕಿ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 6:02 IST
Last Updated 13 ಸೆಪ್ಟೆಂಬರ್ 2025, 6:02 IST
ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಉಪಾಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು  ಪ್ರಜಾವಾಣಿ ಚಿತ್ರ
ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಉಪಾಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು  ಪ್ರಜಾವಾಣಿ ಚಿತ್ರ   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಿರೇಕೋಡಿಯ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 84 ವಿದ್ಯಾರ್ಥಿಗಳು ಶುಕ್ರವಾರ ಬೆಳಿಗ್ಗೆ ಉ‍ಪಾಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇವರಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡ 19 ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ತೀವ್ರ ಅಸ್ವಸ್ಥಗೊಂಡ ಒಬ್ಬ ವಿದ್ಯಾರ್ಥಿನಿಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲು ಕರೆದೊಯ್ಯಲಾಗಿದೆ.

ತಾಲ್ಲೂಕು ಆಸ್ಪತ್ರೆಯಲ್ಲಿ 37 ಬಾಲಕರು ಹಾಗೂ 33 ಬಾಲಕಿಯರು, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 7 ಬಾಲಕರು ಹಾಗೂ 7 ಬಾಲಕಿಯರಿಗೆ ಚಿಕಿತ್ಸೆ ನೀಡಲಾಗಿದೆ. 

ADVERTISEMENT

‘ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿಗಳು ವಾಂತಿ– ಭೇದಿಯಿಂದ ತೀವ್ರ ಅಸ್ವಸ್ಥರಾಗಿದ್ದರಿಂದ ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ‘ಪ್ರಜಾವಾಣಿ’ಗೆ ತಿಳಿಸಿದರು.

‘ಹಿರೇಕೋಡಿಯ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಉಪಾಹಾರ ಸೇವಿಸಿ ಅಸ್ವಸ್ಥಗೊಂಡ 101 ಬಾಲಕರನ್ನು ಹಾಗೂ 76 ಬಾಲಕಿಯರು ಸೇರಿದಂತೆ 177 ವಿದ್ಯಾರ್ಥಿಗಳು ಸ್ಥಳಕ್ಕೆ ಭೇಟಿ ನೀಡಿದ ವೈದ್ಯರ ತಂಡ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ನೀಡಿದ್ದಾರೆ’ ಎಂದೂ ಅವರು ವಿವರಿಸಿದರು.

ಸ್ಥಳಕ್ಕೆ ಧಾವಿಸಿದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಹಾಸ್ಟೆಲ್‌ನ ಸಿಬ್ಬಂದಿ ಹಾಗೂ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಸತಿ ನಿಲಯದಲ್ಲಿ ಶುದ್ಧ ನೀರು, ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ಕೊಡುವಂತೆ ತಾಕೀತು ಮಾಡಿದರು.

ವಿಷಾಹಾರ ಸೇವನೆಯಿಂದ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿಗಳನ್ನು ರಾಜ್ಯ ಸರ್ಕಾರದ ದೆಹಲಿವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು  ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.