ADVERTISEMENT

ಕೃಷಿ ಇಲಾಖೆ–ರೈತರ ನಡುವೆ ಅಂತರ ತಗ್ಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 2:48 IST
Last Updated 21 ಡಿಸೆಂಬರ್ 2025, 2:48 IST
ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಮಹಾತ್ಮ ಗಂಧೀಜಿ ನಿರ್ಮಿಸಿದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ಎನ್.ಚೆಲುವರಾಯಸ್ವಾಮಿ ಇತರರು ಜತೆಯಾದರು
ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಮಹಾತ್ಮ ಗಂಧೀಜಿ ನಿರ್ಮಿಸಿದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ಎನ್.ಚೆಲುವರಾಯಸ್ವಾಮಿ ಇತರರು ಜತೆಯಾದರು   

ಹುದಲಿ (ಬೆಳಗಾವಿ): ‘ಕೃಷಿ ಇಲಾಖೆ ಹಾಗೂ ರೈತರ ನಡುವಿನ ಅಂತರ ಕಡಿಮೆ ಮಾಡಬೇಕು. ಅಧಿಕಾರಿಗಳು ಕಚೇರಿಯಲ್ಲೇ ಕುಳಿತುಕೊಳ್ಳದೇ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ರೈತರನ್ನು ಜಾಗೃತಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ‌ಪಂಚಾಯಿತಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಆಶ್ರಯದಲ್ಲಿ ತಾಲ್ಲೂಕಿನ ಹುದಲಿ ಗ್ರಾಮದ ಬೆಳಗಾಂ ಶುಗರ್ಸ್‌ ಪಕ್ಕದ ಜಮೀನಿನಲ್ಲಿ ಶನಿವಾರ ಜರುಗಿದ ‘ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಈ ದೇಶ ಕೃಷಿ ಮೇಲೆ ನಿಂತಿದೆ. ಅದನ್ನರಿತು ಸರ್ಕಾರ ರೈತರಿಗೆ ಹೆಚ್ಚಿನ ಪ್ರೋತ್ಸಾಹ, ನೆರವು ನೀಡುತ್ತಿದೆ. ನೀರಾವರಿಗಾಗಿ ಶೇ 90ರಷ್ಟು ರಿಯಾತಿಯಲ್ಲಿ ಯಂತ್ರಗಳನ್ನು ನೀಡುತ್ತಿದ್ದೇವೆ. ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡುತ್ತಿದ್ದೇವೆ. ರೈತರ ಕೂಡ ಆಧುನಿಕ ಬೇಸಾಯದತ್ತ ಹೊರಳಬೇಕು’ ಎಂದು ಕಿವಿಮಾತು ಹೇಳಿದರು.

ADVERTISEMENT

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.

ರಾಜ್ಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕ ಬಾಬಾಸಾಹೇಬ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಹುದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಬಸ್ಸುಮ್‌ ಬಂಡಿ, ಕೃಷಿ ಇಲಾಖೆ ಸರ್ಕಾರದ ಮುಖ್ಯ ಕಾರ್ಯದರ್ಶಿ  ಡಾ.ಎಸ್.ಸೆಲ್ವಕುಮಾರ್, ಕೃಷಿ ಆಯುಕ್ತ ವೈ.ಎಸ್.ಪಾಟೀಲ, ಸಕ್ಕರೆ ಆಯುಕ್ತ ಗೋವಿಂದ ರೆಡ್ಡಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ‌ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ವೇದಿಕೆ ಮೇಲಿದ್ದರು.

ಕಬ್ಬು ಕಟಾವು ಯಂತ್ರಗಳನ್ನು ಸಬ್ಸಿಡಿ ಮೂಲಕ ವಿತರಿಸುತ್ತಿರುವುದು ರಾಷ್ಟ್ರಕ್ಕೆ ಮಾದರಿ. ಕೃಷಿ ಕಾರ್ಮಿಕರ ಕೊರತೆ ನೀಗಿಸಿ ಉತ್ತಮ‌ ಆದಾಯ ಪಡೆಯಬಹುದು
ಎನ್‌.ಚಲುವರಾಯಸ್ವಾಮಿ ಸಚಿವ ಕೃಷಿ
ರೈತರು ದುಪ್ಪಟ್ಟು ಆದಾಯ ಪಡೆಯಲು ಅನುಕೂಲವಾಗುವಂತೆ ಸರ್ಕಾರ ಅನೇಕ ಯೋಜನೆ ನೀಡುತ್ತಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತಂದಿದೆ
ಸತೀಶ ಜಾರಕಿಹೊಳಿ ಸಚಿವ ಜಿಲ್ಲಾ ಉಸ್ತುವಾರಿ
ಕಾಲ ಬದಲಾದಂತೆ ರೈತರೂ ಕೃಷಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು. ಉತ್ತಮ ಇಳುವರಿ ಹಾಗೂ ಆದಾಯ ಪಡೆದುಕೊಳ್ಳಬೇಕು. ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಬೇಕು
ಲಕ್ಷ್ಮೀ ಹೆಬ್ಬಾಳಕರ ಸಚಿವೆ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆ
ದೇಶದಲ್ಲಿ 400ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳಿದ್ದು 5 ಕೋಟಿಗಿಂತ ಅಧಿಕ ಜನ ಕಬ್ಬು ಬೆಳೆಯುತ್ತಿದ್ದಾರೆ. ಯೋಗ್ಯ ದರ ಕೊಡಲು ನಾವು ಪ್ರಯತ್ನ ನಡೆಸಿದ್ದೇವೆ
ಶಿವಾನಂದ ಪಾಟೀಲ ಸಕ್ಕರೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.