ಬೆಳಗಾವಿ: ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ವಿಚಾರದಲ್ಲಿ ಸಂತ್ರಸ್ತೆ ಎನ್ನಲಾಗುತ್ತಿರುವ ಯುವತಿಯು ಕೇವಲ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದರೆ ಆಗುವುದಿಲ್ಲ. ಸಂಬಂಧಿಸಿದ ಪೊಲೀಸ್ ಠಾಣೆಗೆ ಬಂದು, ತನಗೆ ಯಾವ ರೀತಿಯಲ್ಲಿ ಅನ್ಯಾಯವಾಗಿದೆ ಎನ್ನುವುದನ್ನು ನಮೂದಿಸಿ ದೂರು ನೀಡಬೇಕು ಎಂದು ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯುವತಿಯು ಕಾನೂನಾತ್ಮಕವಾಗಿ ಮುಂದೆ ಬರಬೇಕು. ಪೊಲೀಸರು ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು’ ಎಂದರು.
‘ಸಿ.ಡಿ. ವಿಚಾರದಲ್ಲಿ ನನ್ನನ್ನು ಸಿಲುಕಿಸಲು ಯತ್ನಿಸಲಾಗುತ್ತಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರನ್ನು ಯಾರೂ ಸಿಲುಕಿಸಲು ಆಗುವುದಿಲ್ಲ. ಪೊಲೀಸ್ ತನಿಖೆಯಿಂದ ಎಲ್ಲವೂ ಸ್ಪಷ್ಟವಾಗಬೇಕಾಗುತ್ತದೆ. ಈ ವಿಷಯದಲ್ಲಿ ಪೊಲೀಸರ ಜವಾಬ್ದಾರಿ ಜಾಸ್ತಿ ಇದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.