ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆದ್ದರೆ, ಆ ಫಲಿತಾಂಶವು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗಲಿದೆ’ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ನಿಂದ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ಸತೀಶ ಬಗ್ಗೆ ಬಿಜೆಪಿಯವರು ಅಪ್ರಚಾರ ಮಾಡುತ್ತಿದ್ದಾರೆ. ವಂದತಿಗೆ ಕಿವಿಗೊಡಬೇಡಿ’ ಎಂದು ಕೋರಿದರು.
‘ಕ್ಷೇತ್ರದ ಜನರು ಇಲ್ಲಿ ಒಂದು ಬಾರಿ ಕಾಂಗ್ರೆಸ್ಗೆ ಅವಕಾಶ ಕೊಟ್ಟರೆ ಇದರ ಪರಿಣಾಮ ಇಡೀ ದೇಶದಲ್ಲಿ ಆಗುತ್ತದೆ’ ಎಂದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದು, ಅವರ ಗೋಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿರುವುದು ಯಾವ ನ್ಯಾಯ? ಜನರಿಗೆ ಈ ಸರ್ಕಾರಗಳ ಕೊಡುಗೆ ಏನು?’ ಎಂದು ಕೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಿನ ಸುವರ್ಣ ವಿಧಾನಸೌಧ ಎದುರು ಧರಣಿ, ಹೋರಾಟ ನಡೆಸಬೇಕು’ ಎಂದು ಕರೆ ನೀಡಿದರು. ‘ಬಡವರಿಗೆ ಮನೆ ಮತ್ತು ನೆರೆ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ’ ಎಂದು ಟೀಕಿಸಿದರು.
ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ‘ಬಿಜೆಪಿಗೆ ಮತ ಹಾಕಿದರೆ ದುರಾಡಳಿತ, ಜನವಿರೋಧಿ ನೀತಿ ಬೆಂಬಲಿಸಿದಂತೆ ಆಗುತ್ತದೆ. ಹೀಗಾಗಿ, ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಜನರ ಪರವಾಗಿರುವವರನ್ನು ಪ್ರೋತ್ಸಾಹಿಸಬೇಕು’ ಎಂದು ಕೋರಿದರು.
ಕೆಲ ಕಾಲ ಮಳೆಯ ನಡುವೆಯೇ ಸಮಾವೇಶ ನಡೆಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಅಭ್ಯರ್ಥಿ ಸತೀಶ ಜಾರಕಿಹೊಳಿ, ನಾಯಕರಾದ ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ, ಎಸ್.ಆರ್. ಪಾಟೀಲ, ಆರ್.ವಿ. ದೇಶಪಾಂಡೆ, ಸಲೀಂ ಅಹಮದ್, ಪ್ರಕಾಶ ಹುಕ್ಕೇರಿ, ಡಾ.ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಪ್ರಸಾದ ಅಬ್ಬಯ್ಯ, ಶಂಕರಗೌಡ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡ ಚನ್ನರಾಜ ಹಟ್ಟಿಹೊಳಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಮುಖಂಡರು, ಗ್ರಾಮದ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.