ADVERTISEMENT

ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್: ಆರೋಪ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 14:19 IST
Last Updated 5 ಅಕ್ಟೋಬರ್ 2020, 14:19 IST
ಈರಣ್ಣ ಕಡಾಡಿ
ಈರಣ್ಣ ಕಡಾಡಿ   

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಮರ್ಪಕ ದಾಖಲೆಗಳಿಲ್ಲದಿರುವುದು ಬಹಿರಂಗವಾಗಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮತ್ತೆ ದಾಳಿ ನಡೆದಿದೆ’ ಎಂದರು.

ADVERTISEMENT

‘ಹಿಂದಿನ ತನಿಖೆ ಇನ್ನೂ ಪೂರ್ಣವಾಗಿಲ್ಲ. ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತವೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ನಾಯಕರು ಎಲ್ಲದರಲ್ಲೂ ರಾಜಕೀಯ ಮಾಡಬಾರದು’ ಎಂದು ಹೇಳಿದರು.

‘ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಕೋವಿಡ್–19 ನಿಯಮಾವಳಿ ಅನುಸರಿಸಿ, ಗೌರವಯುತವಾಗಿ ನೆರವೇರಿಸಲಾಗಿದೆ. ಹೀಗಿರುವಾಗ ಅಂಗಡಿ ಅವರ ಕುಟುಂಬದವರಿಗೆ ನಮ್ಮ ಸರ್ಕಾರ ನ್ಯಾಯ ಒದಗಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೊದಲಾದವರು ಗುಲ್ಲೆಬ್ಬಿಸುವುದರಲ್ಲಿ ಅರ್ಥವಿಲ್ಲ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.