ADVERTISEMENT

ಬಿಜೆಪಿ ಟೀಕಿಸಲು ಕಾಂಗ್ರೆಸ್‌ ಬಳಿ ವಿಷಯವಿಲ್ಲ: ಜಗದೀಶ ಶೆಟ್ಟರ್‌

ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 10:40 IST
Last Updated 26 ಏಪ್ರಿಲ್ 2024, 10:40 IST
<div class="paragraphs"><p>ಬೆಳಗಾವಿಯ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸ್ಥಳವನ್ನು ಜಗದೀಶ ಶೆಟ್ಟರ್‌ ಪರಿಶೀಲಿಸಿದರು</p></div>

ಬೆಳಗಾವಿಯ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸ್ಥಳವನ್ನು ಜಗದೀಶ ಶೆಟ್ಟರ್‌ ಪರಿಶೀಲಿಸಿದರು

   

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಟೀಕಿಸಲು ಕಾಂಗ್ರೆಸ್‌ನವರ ಬಳಿ ಅಸ್ತ್ರವಿಲ್ಲ. ಹಾಗಾಗಿ ನನ್ನನ್ನೇ ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಆದರೆ, ಬೆಳಗಾವಿ ಕ್ಷೇತ್ರದಲ್ಲಿನ ವಿವಿಧ ಭಾಷಿಕರು ಬಿಜೆಪಿ ಬೆಂಬಲಿಸುತ್ತಿದ್ದಾರೆ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿನ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸ್ಥಳವನ್ನು ಶುಕ್ರವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ADVERTISEMENT

‘ಇದು ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲ. ಆ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆ ಆಟವಾಡುತ್ತವೆ. ಆದರೆ, ಲೋಕಸಭೆ ಚುನಾವಣೆ ರಾಷ್ಟ್ರೀಯ ವಿಷಯಗಳ ಆಧಾರದಲ್ಲೇ ನಡೆಯುತ್ತದೆ. ಸುರಕ್ಷಿತ ಮತ್ತು ಸದೃಢ ರಾಷ್ಟ್ರಕ್ಕಾಗಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಲೆಂದು ಜನ ಬಯಸುತ್ತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿನ ವಿವಿಧ ಭಾಷಿಕ ಮತ್ತು ಸಮುದಾಯಗಳ ಮತದಾರರು ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಪರ ನಿಂತಿದ್ದರು. ಈ ಸಲವೂ ನಿಲ್ಲುತ್ತಾರೆ’ ಎಂದರು.

‘ಎನ್‌ಡಿಎ ಮೈತ್ರಿಕೂಟವು ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದೆ. ಆದರೆ, ‘ಇಂಡಿ’ ಮೈತ್ರಿ ಕೂಟದವರಿಗೆ ಪ್ರಧಾನಿ ಅಭ್ಯರ್ಥಿ ಯಾರು ಎಂದೇ ಗೊತ್ತಿಲ್ಲ. ಈ ಚುನಾವಣೆಯಲ್ಲಿ ಬಹುಮತ ಗಳಿಸಲು ಯಾವುದೇ ಪಕ್ಷಕ್ಕೆ 270 ಸಂಸದರ ಅಗತ್ಯವಿದೆ. ಆದರೆ, 230 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿರುವ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದರು.

‘ಏಪ್ರಿಲ್‌ 27ರಂದು ರಾತ್ರಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿರುವ ಪ್ರಧಾನಿ, 28ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಬಿ.ಎಸ್‌.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಇದರಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಸಹಸ್ರಾರು ಮಂದಿ ಸೇರಲಿದ್ದಾರೆ. ಪ್ರಧಾನಿ ಅವರು ಇಲ್ಲಿನ ನಾಯಕರ ಜತೆ ಮೋದಿ ಸಭೆ ನಡೆಸುತ್ತಾರೆ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ’ ಎಂದರು.

‘ಮುಸ್ಲಿಂ ತುಷ್ಟೀಕರಣ ನೀತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ ಎನ್ನುತ್ತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸಂತ್ರಸ್ತೆ ಬಗ್ಗೆ ಕಾಳಜಿ ಇದ್ದರೆ, ಆರೋಪಿಗಳ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕು’ ಎಂದು ಅವರು ಹೇಳಿದರು.

ಸಂಸದೆ ಮಂಗಲಾ ಅಂಗಡಿ, ಮುಖಂಡರಾದ ಅನಿಲ ಬೆನಕೆ, ಎಂ.ಬಿ.ಝಿರಲಿ, ಮಹಾಂತೇಶ ಕವಟಗಿಮಠ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.