ಬೆಳಗಾವಿ: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ತೈಲ ಬೆಲೆಯನ್ನು ಕೂಡಲೇ ಇಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಗರದಲ್ಲಿ ಸೋಮವಾರ ಪಾದಯಾತ್ರೆ ಮಾಡಿದರು.
ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡಿದ ಮುಖಂಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ವಿನಯ ನಾವಲಗಟ್ಟಿ, ಫಿರೋಜ್ ಸೇಠ್ ಸೇರಿದಂತೆ ಹಲವು ಮುಖಂಡರು ನೇತೃತ್ವ ವಹಿಸಿದ್ದರು.
‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಸಾಕಷ್ಟು ಕಡಿಮೆಯಾಗಿದೆ. ಆದರೆ, ದೇಶದಲ್ಲಿ ಮಾತ್ರ ಬೆಲೆಯನ್ನು ಇಳಿಸಲಾಗಿಲ್ಲ. ಕೊರೊನಾ ಹೊಡೆತಕ್ಕೆ ಸಿಲುಕಿ ಈಗಾಗಲೇ ಬಳಲಿ ಬೆಂಡಾಗಿ ಹೋಗಿರುವ ಜನಸಾಮಾನ್ಯರು ತೈಲೆ ಬೆಲೆ ಏರಿಕೆಯಿಂದ ಇನ್ನಷ್ಟು ಜರ್ಝರಿತರಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘2014ರ ಮೇ ತಿಂಗಳಿನಲ್ಲಿ ಬಿಜೆಪಿ ಕೇಂದ್ರದ ಚುಕ್ಕಾಣಿ ಹಿಡಿದಾಗ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 9.20 ಹಾಗೂ ಡೀಸೆಲ್ ಮೇಲೆ ₹ 3.46 ಅಬಕಾರಿ ಸುಂಕವಿತ್ತು. ಆದರೆ, ಈಗ ಅದು ₹ 23.78 ಹಾಗೂ ₹ 28.37 ಕ್ಕೆ ಏರಿಕೆಯಾಗಿದೆ. ಜನಸಾಮಾನ್ಯರಿಗೆ ಇದು ಹೊರೆಯಾಗಿದೆ. ತಕ್ಷಣ ಬೆಲೆ ಇಳಿಸಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ರವಾನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.