ADVERTISEMENT

‘ಕೃಷಿ ಸಂಪೂರ್ಣ ಬಂಡವಾಳಶಾಹಿಗಳ ಕೈಗೆ ಸಿಲುಕುವ ಆತಂಕ’

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 10:07 IST
Last Updated 8 ಡಿಸೆಂಬರ್ 2020, 10:07 IST
ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಮಂಗಳವಾರ ಕರೆ ನೀಡಲಾಗಿದ್ದ ಭಾರತ ಬಂದ್ ಬೆಂಬಲಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಮಂಗಳವಾರ ಕರೆ ನೀಡಲಾಗಿದ್ದ ಭಾರತ ಬಂದ್ ಬೆಂಬಲಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಕೃಷಿ ಕಾಯ್ದೆಗಳಿಂದಾಗಿ ಕೃಷಿ ಸಂಪೂರ್ಣ ಬಂಡವಾಳಶಾಹಿಗಳ ಕೈಗೆ ಸಿಲುಕುವ ಆತಂಕವಿದೆ’ ಎಂದು ಕಾಂಗ್ರೆಸ್ ಮುಖಂಡ ಮತ್ತು ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ದೂರಿದರು.

ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಬೆಂಬಲಿಸಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಪಕ್ಷದಿಂದ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

‘ಕೋವಿಡ್ ಸಂಕಷ್ಟದ ಸಂದರ್ಭ ಬಳಸಿಕೊಂಡು ತರಾತುರಿಯಲ್ಲಿ ಕಾಯ್ದೆಗಳನ್ನು ಮಂಡಿಸಲಾಗಿದೆ. ಅಧಿವೇಶನದಲ್ಲಿ ಸುದೀರ್ಘ ಚರ್ಚೆಯೇ ಆಗದಿದ್ದಾಗ ಜನರಿಗೆ ಕಾಯ್ದೆ ಅರ್ಥವಾಗುವುದು ಹೇಗೆ? ರೈತರು ಪ್ರತಿಭಟನೆ ಆರಂಭಿಸಿದಾಗ ಹತ್ತಿಕ್ಕುವ ಪ್ರಯತ್ನ ಮಾಡಿದ್ದೇಕೆ? ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಜಲಫಿರಂಗಿ, ಲಾಠಿ ಬಳಸಿ ಕೆರಳಿಸುವ ಪ್ರಯತ್ನ ಮಾಡಿದ್ದೇಕೆ? ರೈತರು ನಿಮ್ಮ‌ ಕಣ್ಣಿಗೆ ಭಯೋತ್ಪಾದಕರಂತೆ ಕಂಡರಾ?’ ಎಂದು ಕೇಳಿದರು.

ADVERTISEMENT

‘ಕೇಂದ್ರದ ರೈತ ವಿರೋಧಿ ನೀತಿಯನ್ನು ರಾಜಕೀಯ ಪಕ್ಷಗಳು ವಿರೋಧಿಸುವುದು ತಪ್ಪೇ?’ ಎಂದ ಅವರು, ಪಂಜಾಬ್‌ ನಾಲ್ಕೈದು ತಿಂಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ’ ಎಂದು ಆರೋಪಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾಳಗಿ, ಮುಖಂಡ ಅಡಿವೇಶ ಇಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.