ADVERTISEMENT

ಈಶ್ವರಪ್ಪ ಬಂಧಿಸಲು ಆಗ್ರಹಿಸಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 16:29 IST
Last Updated 13 ಏಪ್ರಿಲ್ 2022, 16:29 IST
   

ಬೆಳಗಾವಿ: ‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, ಅವರನ್ನು ಬಂಧಿಸಬೇಕು ಎನ್ನುವುದು ನಮ್ಮ ಪ್ರಮುಖ ಆಗ್ರಹವಾಗಿದೆ’ ಎಂದರು.

ADVERTISEMENT

‘ಏ. 15ರಿಂದ 20ರವರೆಗೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಜಿಲ್ಲೆಗಳ ಪ್ರವಾಸ ಮಾಡಲಿದ್ದೇವೆ. ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತೇವೆ’ ಎಂದು ಹೇಳಿದರು.

‘ಸಂತೋಷ್ ಕುಟುಂಬದವರನ್ನು ಹತ್ತಿಕ್ಕಲು ಪ್ರಯತ್ನ ನಡೆದಿದೆ ಎಂದು ಕೆಲವು ಮಾಹಿತಿ ಬಂದಿದೆ. ಸಾಕ್ಷ್ಯ ಇಲ್ಲದೆ ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಮೃತನ ತಾಯಿ, ಪತ್ನಿಯೆ ನೇರವಾಗಿಯೇ ಆರೋಪಿಸಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.