ADVERTISEMENT

‘ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ ಕಾಂಗ್ರೆಸ್‌ ಅಧಿಕಾರಕ್ಕೇರಲು ನಾಂದಿಯಾಗಲಿದೆ’

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 14:17 IST
Last Updated 28 ಜೂನ್ 2020, 14:17 IST
ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಅವರುಜುಲೈ 2ರಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ದೇಶದ ಇತಿಹಾಸದಲ್ಲಿಯೇ ಹೊಸ ದಾಖಲೆ ಬರೆಯಲಿದ್ದು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ನಾಂದಿ ಹಾಡಲಿದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಹಿನ್ನೆಲೆಯಲ್ಲಿ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಬೇಕಿರುವುದರಿಂದ ರಾಜ್ಯದ 7,800 ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಅಥವಾ ಟಿವಿಗಳನ್ನು ಅಳವಡಿಸಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. 10 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಆರಂಭದಲ್ಲಿ ಎಲ್ಲರೂ ರಾಷ್ಟ್ರಗೀತೆ ಹಾಡುವರು. ಬಳಿಕ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲೂ 550 ಕಡೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜನರು 7676366666 ನಂಬರ್‌ಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಕಾರ್ಯಕ್ರಮ ಬೆಂಬಲಿಸಲಿದ್ದಾರೆ. ನಾವು ಡಿಜಿಟಲ್ ವ್ಯವಸ್ಥೆ ಬಳಸಿಕೊಂಡು ಈ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಟವಾಗಿ ಮಾಡುತ್ತಿದ್ದೇವೆ. ಇದು ಯಾರ ಕಾಪಿಯೂ ಅಲ್ಲ. ನಾವು ಯಾರದ್ದೂ ಕಾಪಿ ಮಾಡುವುದಿಲ್ಲ. ಬದಲಾಗಿ ನಮ್ಮ ನೂರಾರು ಯೋಜನೆಗಳನ್ನು ಬೇರೆಯವರು ಕಾಪಿ ಮಾಡಿದ್ದನ್ನು ಉದಾಹರಣೆ ಸಹಿತ ತೋರಿಸಬಲ್ಲೆ’ ಎಂದರು.

ADVERTISEMENT

‘ಪಕ್ಷದ ಕಚೇರಿಯನ್ನು ದೇವಸ್ಥಾನ’ ಎಂದ ಅವರು, ‘ನಾನು ಜಿಲ್ಲಾ ಘಟಕದ ಅಧ್ಯಕ್ಷೆಯಾಗಿದ್ದಾಗ ಕಷ್ಟಪಟ್ಟು ಈ ಜಾಗ ಪಡೆದು ನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಈಗ ಮೊದಲ ಪತ್ರಿಕಾಗೋಷ್ಠಿ ನಡೆಸುತ್ತಿದ್ದೇನೆ’ ಎಂದು ಭಾವುಕರಾದರು.

‘ಜಿಲ್ಲೆಯ ಹೆಮ್ಮೆಯ ಸುಪುತ್ರ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಮತ್ತು ಸಲೀಂ ಅಹ್ಮದ್ ಅವರು ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪಕ್ಷದ ಎಲ್ಲ ಮುಖಂಡರೂ ಒಗ್ಗಟ್ಟಿನಿಂದಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ಮುಖಂಡರು. ಕಾರ್ಯಕ್ರಮಕ್ಕೆ ಹೆಚ್ಚು ಪ್ರಚಾರ ಸಿಗಲಿ ಎನ್ನುವ ಕಾರಣಕ್ಕೆ ಬೇರೆ ಬೇರೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದೇವೆ. ಇಂದು ಎಲ್ಲ ಜಿಲ್ಲೆಗಳಲ್ಲೂ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದೇವೆ. ಇದರಲ್ಲಿ ಭಿನ್ನಾಭಿಪ್ರಾಯದ ಸಂಗತಿ ಏನಿಲ್ಲ. ಎಲ್ಲ ವರ್ಗದ ಅಭ್ಯುದಯಕ್ಕಾಗಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಮಾತನಾಡಿ, ‘ಇಂಧನ ದರ ಏರಿಕೆ ವಿರೋಧಿಸಿ ಜೂನ್‌ 29ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. ಮುಖಂಡರು ಬೈಸಿಕಲ್‌ಗಳಲ್ಲಿ ಬರುವ ಮೂಲಕ ಕೇಂದ್ರದ ವಿರುದ್ಧ ಪ್ರತಿರೋಧ ದಾಖಲಿಸಲಿದ್ದೇವೆ’ ಎಂದರು.

ಮುಖಂಡ ಫಿರೋಜ್ ಸೇಠ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.