ಬೆಳಗಾವಿ: ‘ಮುಂದೆ ಬರುವಂತಹ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಶೂನ್ಯಕ್ಕೆ ತಲುಪಲಿದೆ. ಕನಕಪುರದ ಬಂಡೆಯೂ ಒಡೆದು ಹೋಗಲಿದೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಇಲ್ಲಿನ ಧರ್ಮನಾಥ ಭವನದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಹಲವು ರಾಜ್ಯಗಳಲ್ಲೂ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಎಲ್ಲಿದೆ ಎನ್ನುವುದನ್ನು ದುರ್ಬೀನು ಹಾಕಿ ಹುಡುಕಬೇಕಾದ ಪರಿಸ್ಥಿತಿ ಇದೆ’ ಎಂದು ಟೀಕಿಸಿದರು.
ಜವಳಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ‘ಜನರಿಗೆ ಕೆಲಸ ಬೇಕಾಗಿದೆ. ಅಭಿವೃದ್ಧಿ ಬೇಕಾಗಿದೆ. ರೈತರ ಪರಿಸ್ಥಿತಿಯನ್ನು ಸುಧಾರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದೆ’ ಎಂದರು.
‘ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕಡಿಮೆ ಮಾಡಿಲ್ಲ. ಇದರಿಂದಾಗಿ ಕರ್ನಾಟಕ ಇಡೀ ದೇಶದಲ್ಲಿಯೇ ಟಾಪಲ್ಲಿದೆ. ಆರೋಗ್ಯ, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಅಗ್ರಗಣ್ಯರಾಗಿದ್ದೇವೆ’ ಎಂದು ತಿಳಿಸಿದರು.
ಅಭ್ಯರ್ಥಿ ಮಂಗಲಾ ಅಂಗಡಿ ಮಾತನಾಡಿ, ‘ಪತಿ ದಿವಂಗತ ಸುರೇಶ ಅಂಗಡಿ ಅವರು ಕೊರೊನಾ ಸಂದರ್ಭದಲ್ಲೂ ಮನೆಯಲ್ಲಿ ಇರಿ ಎಂದು ಹೇಳಿದರೂ ಇರಲಿಲ್ಲ. ಕ್ಷೇತ್ರದಾದ್ಯಂತ ಸಂಚರಿಸಿ ಜನರ ಸಂಕಷ್ಟ ಆಲಿಸಿದರು. ಅವರು ದೆಹಲಿಗೆ ಹೋಗುವಾಗಲೂ ಹುಷಾರಿರಲಿಲ್ಲ. ನಮಗೆ ಧೈರ್ಯ ಹೇಳಿ ಹೋದರು’ ಎಂದು ನೆನೆದು ಕಣ್ಣೀರಿಟ್ಟರು.
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಕ್ತಾರ ಎಂ.ಬಿ. ಝಿರಲಿ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.