ADVERTISEMENT

ಕ್ಷೇತ್ರ ಬದಲಾವಣೆ ಚರ್ಚೆಯಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 12:51 IST
Last Updated 1 ಜುಲೈ 2021, 12:51 IST

ಬೆಳಗಾವಿ: ‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಗೋಕಾಕಕ್ಕೆ ಸೀಮಿತವಾಗಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾಯಿಸುವ ಯಾವುದೇ ಚರ್ಚೆ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪುತ್ರ ರಾಹುಲ್‌ ಮತ್ತು ಪತ್ರಿ ಪ್ರಿಯಾಂಕಾಗೆ ಇನ್ನೂ ರಾಜಕೀಯ ಅನುಭವ ಬೇಕು. ರಾಜಕೀಯವೆಂದರೆ ಸುಲಭವಲ್ಲ. ಅನುಭವ ದೊರೆತ ನಂತರ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ವಿಚಾರ ಮಾಡುತ್ತೇವೆ. ಅವರು ಈಗ ಯುವ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಈಗಲೇ ಅವರಿಗೆ ಯಾವುದೇ ಹುದ್ದೆ ನೀಡುವ ವಿಚಾರವಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ದೊರೆಯುವುದೇ ಎಂಬ ಪ್ರಶ್ನೆಗೆ, ‘ಆ ಬಗ್ಗೆ ನನಗೆ ಗೊತ್ತಿಲ್ಲ. ಅದು ಅವರ ಪಕ್ಷದ (ಬಿಜೆಪಿ) ಆಂತರಿಕ ವಿಚಾರ’ ಎಂದರು.

ADVERTISEMENT

ಲಖನ್‌ ಪಕ್ಷದಲ್ಲಿಲ್ಲ:‘ಸಹೋದರ ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಸದ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿಲ್ಲ’ ಎಂದು ಉತ್ತರಿಸಿದರು.

‘ಉದ್ಯೋಗ ಸೃಷ್ಟಿ ಮಾಡುವುದೇ ದೊಡ್ಡ ಸವಾಲಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ಈಗಾಗಲೇ ದೇಶದಾದ್ಯಂತ 10 ಕೋಟಿ ಉದ್ಯೋಗವನ್ನು ಕಳೆದುಕೊಂಡಿದ್ದೇವೆ. ಅದನ್ನು ಮರಳಿ ಸೃಷ್ಟಿ ಮಾಡುವುದೇ ದೊಡ್ಡ ಸಾಹಸ. ಮೊದಲು ಇದ್ದಿದ್ದನ್ನೆ ಪುನರ್ ಸೃಷ್ಟಿಸುವುದೇ ಮುಂದಿನ ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ’ ಎಂದು ಹೇಳಿದರು.

ಜನರ ಮೇಲೆ ಹೇರುತ್ತಿರುವ ಮೋದಿ:‘ಕೇಂದ್ರ ಸರ್ಕಾರದವರು ₹ 8ಸಾವಿರ ಕೋಟಿ ಖರ್ಚು ಮಾಡಿ ಸಂಸತ್‌ ಭವನ ಕಟ್ಟುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ₹ 8ಸಾವಿರ ಕೋಟಿಯ ವಿಮಾನದಲ್ಲಿ ಓಡಾಡುತ್ತಿದ್ದಾರೆ. ಆ ಖರ್ಚನ್ನು ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು. ‘ಮೋದಿ ಅವರು, ಏರ್‌ ಇಂಡಿಯಾ ವಿಮಾನಗಳೇ ಸಾಕಷ್ಟಿವೆ. ಅವುಗಳನ್ನೇ ಬಳಸಬಹುದಿತ್ತು’ ಎಂದರು.

‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್‌ ಮತ್ತು ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ನಾವು ಪ್ರತಿಭಟಿಸುತ್ತಿದ್ದೇವೆ. ನಮ್ಮ ಶಕ್ತಿ ಮೀರಿ ಹೋರಾಡಿ ಜನರಿಗೆ ಮನವರಿಕೆ ಮಾಡುತ್ತಿದ್ದೇವೆ. ಆದರೆ, ಜನ ಕೂಡ ಹೊರಗೆ ಬಂದು ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಬೇಕು. ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಪಕ್ಷದಲ್ಲೂ ಸಾಕಷ್ಟು ಬದಲಾವಣೆಗಳು ಆಗಬಹುದು’ ಎಂದು ತಿಳಿಸಿದರು.

‘ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿಯವರೇ ಮುಂದಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರಿಗೆ ಈ ನಿಟ್ಟಿನಲ್ಲಿ ತರಬೇತಿ ನೀಡುತ್ತಿದ್ದೇವೆ ಮತ್ತು ಕಾರ್ಯಾಗಾರಗಳನ್ನು ನಡೆಸುತ್ತಿದ್ದೇವೆ. ಅವರ ಸರಿಸಮಾನವಾಗಿ ಸ್ಪರ್ಧಿಸಲು ಎಲ್ಲ ರೀತಿಯಲ್ಲಿ ಶ್ರಮಿಸುತ್ತಿದ್ದೇವೆ’ ಎಂದು ಹೇಳಿದರು.

ಕಾಂಗ್ರೆಸ್‌ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.