ಬೆಳಗಾವಿ: ‘ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಆಗ, ಸಂವಿಧಾನ ದಿನ ಆಚರಣೆ ಉದ್ದೇಸ ಸಾರ್ಥಕವಾಗುತ್ತದೆ’ ಎಂದು ವಕೀಲ ಅಶೋಕ ಹಲಗಲಿ ಅಭಿಪ್ರಾಯಪಟ್ಟರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಸ್ಮರಿಸಿದ ಅವರು, ‘ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಅತಿ ದೀರ್ಘ ಲಿಖಿತ ಸಂವಿಧಾನವಾಗಿದೆ. ಕೇಂದ್ರ, ರಾಜ್ಯ ಸರ್ಕಾರ, ಸ್ಥಳೀಯ ಆಡಳಿತವಲ್ಲದೇ ಅನೇಕ ಸಂವಿಧಾನಾತ್ಮಕ ಸಂಸ್ಥೆಗಳ ಬಗ್ಗೆ ಸ್ಪಷ್ಟ ವಿವರಣೆ ಹೊಂದಿದೆ. ಪ್ರತಿಯೊಬ್ಬರೂ ಸಂವಿಧಾನದ ಅರಿವು ಹೊಂದಿರಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಂ. ಜಯಪ್ಪ ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. ‘ಪ್ರತಿಯೊಬ್ಬರೂ ಸಂವಿಧಾನ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಸರ್ಕಾರ ಪದವಿ ಮಟ್ಟದಲ್ಲಿ ಎಲ್ಲ ಕೋರ್ಸ್ಗಳಿಗೆ ಭಾರತದ ಸಂವಿಧಾನವನ್ನು ಕಡ್ಡಾಯ ಪಠ್ಯವನ್ನಾಗಿ ಅಳವಡಿಸಿದೆ’ ಎಂದು ಹೇಳಿದರು.
ಉಪ ಪ್ರಾಚಾರ್ಯರಾದ ಅನಿಲ ರಾಮದುರ್ಗ ಸ್ವಾಗತಿಸಿದರು. ಡಾ.ಎಂ.ಎನ್. ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ರಾಖಿ ಕಲ್ಪತ್ರಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಸಂಗೀತಾ ಲಮಾಣಿ ನಿರೂಪಿಸಿದರು. ಡಾ.ಮಲ್ಲೇಶ ದೊಡ್ಡಲಕ್ಕಣ್ಣವರ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.