ADVERTISEMENT

ಕೋವಿಡ್ ಹರಡದಂತೆ ಮುಂಜಾಗ್ರತೆ ವಹಿಸಲು ಸಚಿವ ರಮೇಶ ಜಾರಕಿಹೊಳಿ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 13:17 IST
Last Updated 1 ಮಾರ್ಚ್ 2021, 13:17 IST
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು   

ಬೆಳಗಾವಿ: ‘ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು’ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ಪ್ರವಾಸಿಮಂದಿರದ ಸಭಾಂಗಣದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಲಸಿಕೆಯ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಗೆ, ಸಂಬಂಧಪಟ್ಟ ಇತರ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು’ ಎಂದು ಸೂಚಿಸಿದರು.

ADVERTISEMENT

ಕೋವಿಡ್ ಲಸಿಕೆಯ ವಿತರಣೆಯ ಬಗ್ಗೆ ಅವರು ಪರಿಶೀಲನೆ ನಡೆಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ‘ಫೆ. 22ರಿಂದ ಮಾರ್ಚ್ 15ರವರೆಗೆ ಕೋವಿಡ್ 2ನೇ ಅಲೆಯ ಹರಡುವಿಕೆಯ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಿಲ್ಲೆಯಲ್ಲಿ ಇದುವರೆಗೂ 5ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ 107 ಪ್ರಕರಣಗಳು
ಸಕ್ರಿಯವಾಗಿವೆ’ ಎಂದು ಮಾಹಿತಿ ನೀಡಿದರು.

‘ಸೋಮವಾರದಿಂದ 3ನೇ ಹಂತದ ಲಸಿಕೆಯ ವಿತರಣೆ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಲಭ್ಯವಾಗಲಿದೆ’ ಎಂದು ತಿಳಿಸಿದರು.

‘ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವಿವಿಧೆಡೆ 14 ಚೆಕ್‌ಪೋಸ್ಟ್‌ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್ ಹರಡದಂತೆ ನೋಡಿಕೊಳ್ಳಲು ಸಹಕರಿಸಬೇಕು’ ಎಂದು ಕೋರಿದರು.

ಕಳಸಾ-ಬಂಡೂರಿ, ಬಳ್ಳಾರಿ ನಾಲಾ ಯೋಜನೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ವಿಧಾನಪರಿಷತ್ತಿನ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯ್ತಿ ಸಿಇಒ ದರ್ಶನ್ ಎಚ್.ವಿ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.