ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಿ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 14:23 IST
Last Updated 4 ಜೂನ್ 2021, 14:23 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ    

ಬೆಳಗಾವಿ: ‘ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ರದ್ದುಪಡಿಸುವುದಾದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾಕೆ ನಡೆಸಬೇಕು?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಿಯು ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಯಸ್ಸಿನ ಅಂತರ ಎರಡು ವರ್ಷಗಳಷ್ಟೇ. ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಲಾಗುವುದು ಎಂದು ಸರ್ಕಾರ ಈಗಾಗಲೇ ತಿಳಿಸಿದೆ. ಹೀಗಿದ್ದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರ ಸರ್ಕಾರವು ಸಿಬಿಎಸ್ಇ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಿದೆ. ಕೇಂದ್ರದಿಂದ ಒಂದು, ರಾಜ್ಯದಿಂದ ಮತ್ತೊಂದು ನಿರ್ಧಾರ ಸರಿಯಲ್ಲ. ಎಲ್ಲರಿಗೂ ಒಂದೇ ಕಾನೂನು’ ಎಂದು ಹೇಳಿದರು.

ADVERTISEMENT

‘ಪರೀಕ್ಷೆ ನಡೆಸಲೇಬೇಕು ಎಂದಾದರೇ ಪೂರ್ವಸಿದ್ಧತೆ ಕೈಗೊಳ್ಳುವುದು ಕಷ್ಟವಿದೆ. ಎಷ್ಟೇ ಮುಂಜಾಗ್ರತೆ ವಹಿಸುತ್ತೇವೆಂದರೂ ಸಾಧ್ಯವಾಗುವುದಿಲ್ಲ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ರದ್ದುಪಡಿಸುವುದು ಉತ್ತಮ’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿರುವುದರ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡವೂ ಇರಬಹುದು. ಆದರೆ, ಮಕ್ಕಳ ಆರೋಗ್ಯವೇ ಮುಖ್ಯ ಎನ್ನುವುದನ್ನು ಮರೆಯಬಾರದು’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.