ADVERTISEMENT

ಕೋವಿಡ್: ಬೆಳಗಾವಿ ಜಿಲ್ಲೆಯಲ್ಲಿ ಶೇ. 94 ಮಂದಿ ಗುಣಮುಖ

ಮರಣ ಪ್ರಮಾಣ ಇಳಿಕೆ: ಜಿಲ್ಲಾಧಿಕಾರಿ ಹಿರೇಮಠ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 13:13 IST
Last Updated 24 ಅಕ್ಟೋಬರ್ 2020, 13:13 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ‘ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಪೈಕಿ ಶೇ.94ರಷ್ಟು ಜನರು ಗುಣಮುಖರಾಗಿದ್ದು, ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ. 0.4ಕ್ಕೆ ಇಳಿದಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು, ‘ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ. ಒಟ್ಟು 328 ಜನರು ಸೋಂಕಿನಿಂದ ಮರಣ ಹೊಂದಿದ್ದಾರೆ. ಮರಣ ಪ್ರಮಾಣವು 7 ದಿನಗಳಲ್ಲಿ ಶೇ.0.5ರಷ್ಟಿದೆ’ ಎಂದಿದ್ದಾರೆ.

‘ಜಿಲ್ಲೆಯಲ್ಲಿ ಪ್ರತಿ ದಿನ 2,300 ಜನರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸೋಂಕಿತರ ಪ್ರಮಾಣ ಶೇ. 5.4ರಷ್ಟಿದೆ. ಆದರೆ ಕಳೆದ ಮೂರು ದಿನಗಳಲ್ಲಿ (ಶನಿವಾರದವರೆಗೆ) ಇದು ಶೇ. 3.7ಕ್ಕೆ ಇಳಿಕೆಯಾಗಿದೆ. ಸೋಂಕಿತರ ಪ್ರಮಾಣ ಕಡಿಮೆ ಆಗುತ್ತಿರುವುದರಿಂದ ಕೆಲವು ಕೋವಿಡ್ ಆಸ್ಪತ್ರೆಗಳು ಕೂಡ ಸ್ಥಗಿತಗೊಂಡಿದ್ದು, ಆಕ್ಸಿಜನ್ ಬೇಡಿಕೆಯು‌ ಕಡಿಮೆಯಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣ ಇಳಿಮುಖವಾಗುತ್ತಿದ್ದರೂ ಸಾರ್ವಜನಿಕರು ಗರಿಷ್ಠ ಮುನ್ನೆಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.