ADVERTISEMENT

ಬಾಲ್ಯವಿವಾಹ ತಡೆಗೆ ನಿರಂತರ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಮೇ 2019, 12:08 IST
Last Updated 16 ಮೇ 2019, 12:08 IST

ಬೆಳಗಾವಿ: ‘ಬಾಲ್ಯವಿವಾಹ ತಡೆಗೆ ನಿರಂತರವಾಗಿ ಅರಿವು ಮೂಡಿಸಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಸೂಚಿಸಿದರು.

ಬಾಲ್ಯವಿವಾಹಗಳನ್ನು ತಡೆಗಟ್ಟುವಿಕೆ, ಗೆಳತಿ ವಿಶೇಷ ಚಿಕಿತ್ಸಾ ಘಟಕ ಹಾಗೂ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ ಕುರಿತಂತೆ ಗುರುವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವ ಜೊತೆಗೆ ಯಾವ ಸಮುದಾಯದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡುಬರುತ್ತವೆಯೋ ಅಂತಹ ಸಮುದಾಯಗಳ ಮುಖಂಡರನ್ನು ಪ್ರತ್ಯೇಕವಾಗಿ ಕರೆದು ಸಭೆ ನಡೆಸಬೇಕು. ಬಾಲ್ಯವಿವಾಹಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ರಾಯಬಾಗ ಹಾಗೂ ಅರಭಾವಿಯಲ್ಲಿ ನಿರ್ದಿಷ್ಟ ಸಮುದಾಯಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇದನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಶಾಲೆಗಳಲ್ಲಿ ರಚಿಸಲಾಗುವ ಶಾಲಾ ಸಂಸತ್ತು ಮೂಲಕವೂ ಈ ಕಾರ್ಯ ನಡೆಸಬೇಕು’ ಎಂದರು.

ಕೌಟುಂಬಿಕ ಕಲಹ ಇತ್ಯರ್ಥಕ್ಕೆ ನಿರ್ದೇಶನ:

‘ಬಾಕಿ ಉಳಿದಿರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಆಪ್ತ ಸಮಾಲೋಚನೆ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಬೇಕು. ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದವರಿಗೆ ಸಮಿತಿಯು ಆಪ್ತಸಮಾಲೋಚನೆಗೆ ಹಾಜರಾಗುವಂತೆ ಮೂರು ನೋಟಿಸ್ ನೀಡಬಹುದು. ಒಂದು ವೇಳೆ ಅವರು ಹಾಜರಾಗದಿದ್ದರೆ ಪ್ರಕರಣವನ್ನು ಪೊಲೀಸ್ ಇಲಾಖೆಗೆ ವರ್ಗಾಯಿಸಬಹುದು’ ಎಂದು ಸ್ಪಷ್ಟಪಡಿಸಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅರ್ಹ ಫಲಾನುಭವಿಗಳನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗುರುತಿಸಬೇಕು. ಆಧಾರ್ ಕಾರ್ಡ್‌ ಅಥವಾ ಇತರ ದಾಖಲಾತಿ ಕೊರತೆ ಕಾರಣಕ್ಕೆ ಯವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವಂತಾಗಬಾರದು. ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿ ತೋರಿಸಬೇಕು’ ಎಂದರು.

ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು:

‘ಜಿಲ್ಲೆಯಲ್ಲಿ ಜಾಗ ಲಭ್ಯವಿರುವ ಕಡೆಗಳಲ್ಲಿ ತಕ್ಷಣವೇ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೆಲಸ ಬಾಕಿ ಉಳಿಯಬಾರದು’ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕದ ಮೂಲಕ ಸಂತ್ರಸ್ತರಿಗೆ ನೀಡಲಾಗುತ್ತಿರುವ ವೈದ್ಯಕೀಯ, ಕಾನೂನು ಮತ್ತು ಆಪ್ತಸಮಾಲೋಚನೆ ಸೇವೆ ಬಗ್ಗೆ ಮಾಹಿತಿ ಪಡೆದುಕೊಂಡರು. ‘ಬಾಲ್ಯವಿವಾಹ, ಅತ್ಯಾಚಾರ ಅಥವಾ ಕೌಟುಂಬಿಕ ಕಲಹ ಪ್ರಕರಣಗಳು ವರದಿಯಾದಾಗ ಸಂಬಂಧಪಟ್ಟ ಅಧಿಕಾರಿಗಳು ನಿಯಮಾವಳಿ ಪ್ರಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್, ಡಿಎಚ್‌ಒ ಡಾ.ಅಪ್ಪಾಸಾಹೇಬ್ ನರಟ್ಟಿ, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಉಪನಿರ್ದೇಶಕ ಗುರುನಾಥ ಕಡಬೂರ, ಆಶ್ರಯ ಪ್ರತಿಷ್ಠಾನದ ಅಧ್ಯಕ್ಷೆ ನಾಗರತ್ನಾ ರಾಮಗೌಡರ, ಅಖಿಲಾ ಪಠಾಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.