ಬೆಳಗಾವಿ: ‘ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಇಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
‘ಪ್ರಕೃತಿ ವಿಕೋಪ ಹಾಗೂ ಕೀಟ ಅಥವಾ ರೋಗ ಬಾಧೆಗಳಿಂದ, ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತಾಲ್ಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ’ ಎಂದು ಹೇಳಿದರು.
‘ಮಾರ್ಗಸೂಚಿ ಪ್ರಕಾರ, ಪ್ರಸಕ್ತ ಸಾಲಿನಿಂದ ಈ ಯೋಜನೆಯು ಐಚ್ಛಿಕವಾಗಿದೆ. ಬೆಳೆ ಸಾಲ ಪಡೆದ ರೈತರಿಗೆ ಈ ಯೋಜನೆಯಿಂದ ಹೊರಗುಳಿಯುವ ಅವಕಾಶವಿದೆ. ಬೆಳೆ ಸಾಲ ಮಂಜೂರಾದ ಎಲ್ಲ ರೈತರನ್ನೂ ಯೋಜನೆಯಲ್ಲಿ ಒಳಪಡಿಸಬಹುದಾಗಿದೆ. ಆದರೆ, ಅವರು ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಸಂಬಂಧಿಸಿದ ಬ್ಯಾಂಕ್ನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು’ ಎಂದರು.
‘ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತನ್ನು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡಬಹುದಾಗಿದೆ. ಆಯಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕ ಮೊ.ಸಂಖ್ಯೆ 9449976218 ಅಥವಾ 9008593066 ಸಂಪರ್ಕಿಸಬಹುದು’ ಎಂದು ತಿಳಿಸಿದರು.
‘ವಿಮಾ ಯೋಜನೆಯಲ್ಲಿ ಪಾಲ್ಗೊಳ್ಳಲು ಹುರುಳಿ (ಮಳೆ ಆಶ್ರಿತ) ಬೆಳೆಗೆ ನ.15, ಮುಸುಕಿನಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ಡಿ. 16 ಹಾಗೂ ಉಳಿದ ಎಲ್ಲ ಅಧಿಸೂಚಿತ ಬೆಳೆಗಳಿಗೆ ನ. 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಬ್ಯಾಂಕ್ಗಳು, ಸಹಕಾರ ಸಂಘಗಳು, ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು (ಮೊ.ಸಂಖ್ಯೆ 8291813953, 9152007779 ಅಥವಾ 6363921268) ಸಂಪರ್ಕಿಸಬಹುದು’ ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.