
ಬೆಳಗಾವಿ: ‘ನಮ್ಮ ಸೇವೆ ಕಾಯಂಗೊಳಿಸಿ ಸಾಮಾಜಿಕ ಭದ್ರತೆ ಒದಗಿಸಿ’ ಎಂದು ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
‘ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳೊಂದಿಗೆ ನಾವು ಬೆಳೆ ಹಾನಿ ಸಮೀಕ್ಷೆ ಮಾಡುತ್ತಿದ್ದೇವೆ. ಸಮೀಕ್ಷೆಗೆ ಹೋದಾಗ, ಕೆಲವೊಮ್ಮೆ ಪ್ರಾಣಿಗಳಿಂದ ಹಲ್ಲೆಗಳೂ ನಡೆದಿವೆ. ಹೀಗಿದ್ದರೂ ನಮಗೆ ವಹಿಸಿದ ಜವಾಬ್ದಾರಿಯನ್ನು ಏಳೆಂಟು ವರ್ಷಗಳಿಂದ ಸರಿಯಾಗಿ ನಿಭಾಯಿಸುತ್ತಿದ್ದರೂ ಸರ್ಕಾರ ಸೌಲಭ್ಯ ಕೊಡುತ್ತಿಲ್ಲ’ ಎಂದು ದೂರಿದರು.
‘ಸಮೀಕ್ಷೆ ಮಾಡುತ್ತಿರುವ ನಮ್ಮ ಸೇವೆ ಕಾಯಂಗೊಳಿಸಬೇಕು. ಗುರುತಿನ ಚೀಟಿ, ಜೀವವಿಮೆ ನೀಡುವ ಜತೆಗೆ, ಗೌರವಧನ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.