ADVERTISEMENT

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್: ಡಿಸಿ ಡಾ.ಕೆ. ಹರೀಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 13:36 IST
Last Updated 21 ಏಪ್ರಿಲ್ 2021, 13:36 IST

ಬೆಳಗಾವಿ: ‘ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮದುವೆ ಮತ್ತಿತರ ನಿಗದಿತ ಸಮಾರಂಭಗಳಿಗೆ ಮಾತ್ರ ಆಯಾ ತಾಲ್ಲೂಕುಗಳ ತಹಶೀಲ್ದಾರರು ಅನುಮತಿ ನೀಡಲಿದ್ದಾರೆ. ಅನುಮತಿ ಪಡೆಯದೆ ಅಥವಾ ನಿಯಮಾವಳಿ ಉಲ್ಲಂಘಿಸಿ ಸಮಾರಂಭ ನಡೆಸುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

‘ಮಾರ್ಗಸೂಚಿಯಲ್ಲಿ ಕೆಲವು ಷರತ್ತುಗಳ ಮೇರೆಗೆ ಮದುವೆ ಮತ್ತಿತರ ಸಮಾರಂಭಗಳಿಗೆ ಅನುಮತಿಸಲಾಗಿದೆ. ಮುಂಚಿತವಾಗಿಯೇ ಆಯಾ ತಹಶೀಲ್ದಾರರಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಅನುಮತಿ ನೀಡುವಾಗ ವಿಧಿಸಲಾಗಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಷರತ್ತುಗಳನ್ನು ಉಲ್ಲಂಘಿಸಿ ಹೆಚ್ಚು ಜನರನ್ನು ಸೇರಿಸಿದರೆ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಸೇರಿದಂತೆ ಇತರ ನಿಯಮಗಳ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

‘ನಿಯಮಗಳನ್ನು ಉಲ್ಲಂಘಿಸಿದರೆ ಮದುವೆ ಮತ್ತಿತರ ಸಮಾರಂಭಗಳ ಸಂಘಟಕರು ಮಾತ್ರವಲ್ಲದೆ ಅಂತಹ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವ ಕಲ್ಯಾಣ ಮಂಟಪಗಳು, ಛತ್ರಗಳು, ಸಮುದಾಯ‌ ಭವನಗಳ ಮಾಲೀಕರು, ವ್ಯವಸ್ಥಾಪಕರನ್ನೂ ಹೊಣೆ ಮಾಡಿ ಅವರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಸ್ಥಳಾವಕಾಶ ಕಲ್ಪಿಸುವಾಗ ಸಂಬಂಧಿಸಿದ ಕಲ್ಯಾಣಮಂಟಪ, ಛತ್ರಗಳು ಹಾಗೂ ಸಮುದಾಯ ಭವನಗಳ ವ್ಯವಸ್ಥಾಪಕರು ಕಡ್ಡಾಯವಾಗಿ ಸಂಘಟಕರಿಂದ ಅನುಮತಿ ಪತ್ರ ಪಡೆದುಕೊಳ್ಳಬೇಕು. ಮದುವೆ ಮತ್ತಿತರ ಸಮಾರಂಭಗಳ ಮೇಲೆ ನಿಗಾ ವಹಿಸಲು ಆಯಾ ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಅವರು ಒಬ್ಬ ವಿಡಿಯೊಗ್ರಾಫರ್‌ ಜೊತೆ ನಿಗಾ ವಹಿಸುತ್ತಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.