ADVERTISEMENT

ಚುನಾವಣೆಗೆ ಮಕ್ಕಳನ್ನು ಬಳಸಿಕೊಂಡರೆ ಕ್ರಮ: ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 16:34 IST
Last Updated 29 ಮಾರ್ಚ್ 2021, 16:34 IST
   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಯಾವುದೇ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು’ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಸೂಚಿಸಿದ್ದಾರೆ.

‘ಬಾಲಕಾರ್ಮಿಕ (ನಿಷೇಧ ಮತ್ತು ನಿಯಮ) ಕಾಯ್ದೆ 1986ರ ಪ್ರಕಾರ, 14 ವರ್ಷದ ಒಳಗಿನವರನ್ನು ಕೆಲಸಗಾರರನ್ನಾಗಿ ಬಳಸಿಕೊಳ್ಳುವುದು ಅಪರಾಧ ಆಗುತ್ತದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು, ಚುನಾವಣಾ ಅಭ್ಯರ್ಥಿಗಳು ಹಾಗೂ ಅಧಿಕಾರಿಗಳು ಪ್ರಚಾರ, ಪ್ರಚಾರಕ್ಕೆ ಸಂಬಂಧಪಟ್ಟ ಸರಕು-ಸಾಮಗ್ರಿಗಳ ಸಾಗಣೆ ಮತ್ತಿತರ ಯಾವುದೇ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ’ ಎಂದು ತಿಳಿಸಿದ್ದಾರೆ.

‘ಬಾಲಕಾರ್ಮಿಕರ ಕುರಿತು ಇರುವ ನಿಯಮಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಇದು ಆಯಾ ರಾಜಕೀಯ ಪಕ್ಷಗಳ ಮುಖಂಡರ ಜವಾಬ್ದಾರಿ ಆಗಿದೆ. ಒಂದು ವೇಳೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಕೋವಿಡ್–19 ಹಿನ್ನೆಲೆಯಲ್ಲಿ, ಕಾರ್ಯಕ್ರಮಗಳು ಅಥವಾ ಜಾತ್ರೆಗಳಿಗೆ ಸ್ಥಳೀಯ ಪರಿಸ್ಥಿತಿಗೆ ಅನುಸಾರ ಆಯಾ ಉಪ ವಿಭಾಗಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿ ಅನುಮತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

‘ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸರ್ಕಾರದಿಂದ ನೀಡಲಾಗುವ ನಿಯಮಾವಳಿಗಳ ಪ್ರಕಾರ ಅನುಮತಿ ನೀಡಬೇಕು. ಸರ್ಕಾರದ ಸೂಚನೆ ಅಥವಾ ನಿರ್ದೇಶನಗಳನ್ನು ಕಾರ್ಯಕ್ರಮದ ಆಯೋಜಕರು ಉಲ್ಲಂಘಿಸಿದರೆ, ಆಯೋಜಕರು ಮತ್ತು ಅನುಮತಿ ನೀಡಿದ ಪ್ರಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.