ADVERTISEMENT

ತಬ್ಬಲಿ ಮಕ್ಕಳ ಆರೈಕೆಗೆ ಕುಟೀರ: ಕಾರಜೋಳ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 14:32 IST
Last Updated 10 ಮೇ 2021, 14:32 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಳಗಾವಿ: ‘ಕೋವಿಡ್‌–19ನಿಂದ ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡು ತಬ್ಬಲಿಯಾದ ಮಕ್ಕಳ ಆರೈಕೆ ಹಾಗೂ ಪುನರ್ವಸತಿಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಕುಟೀರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿ, ಶೀಘ್ರವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಲಹೆ ನೀಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ‘ನಾನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ನಿಂದ ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡು ಮಕ್ಕಳು ರೋದಿಸುತ್ತಿದ್ದ ಮನಕಲಕುವಂತಹ ಅನೇಕ ದೃಶ್ಯಗಳನ್ನು ಕಂಡಿದ್ದೇನೆ. ಇಂತಹ ದುಃಸ್ಥಿತಿಯಲ್ಲಿರುವ ಮಕ್ಕಳ ಕುರಿತು ಕೂಡಲೇ ಸಮೀಕ್ಷೆ ನಡೆಸಬೇಕು. ಅವರ ಆರೈಕೆಗಾಗಿ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೂಡಲೇ ಅನಾಥ ಮಕ್ಕಳ ಕುಟೀರಗಳನ್ನು ಸ್ಥಾಪಿಸಬೇಕು. ಅವರಿಗೆ ಮನೋಸ್ಥೈರ್ಯ ತುಂಬಿ, ಅಗತ್ಯ ಚಿಕಿತ್ಸೆ, ಆಹಾರದೊಂದಿಗೆ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಟ್ಟು ಪೋಷಿಸಲು ನೆರವಾಗಬೇಕು’ ಎಂದು ಕೋರಿದ್ದಾರೆ.

‘ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.