ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್ ಗೆ ಹೋದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರನ್ನು ಮಾತನಾಡಿಸಿ ಧೈರ್ಯ ತುಂಬಿದರು.
ಚಿಕಿತ್ಸೆ ಫಲಕಾರಿಯಾಗಲಿದ್ದು, ಯಾರು ಎದೆಗುಂದಬಾರದು. ಬೇಗ ಗುಣಮುಖರಾಗಿ ಬನ್ನಿ ಎಂದು ರೋಗಿಗಳಿಗೆ ಹಾರೈಸಿದರು.
ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ. ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದು ತಾಕೀತು ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುಗಳ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಲ್ಲಿನ ವ್ಯವಸ್ಥೆ ಬಗ್ಗೆ ಸಮಾಧಾನವಾಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳಿಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ. ಇಲ್ಲಿನ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.