ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವಿವಿಧ ಕಾಲೇಜುಗಳಿಗೆ ಮಂಗಳವಾರ ಭೇಟಿ ನೀಡಿ, ಆಫ್ಲೈನ್ ತರಗತಿಗೆ ಕೈಗೊಂಡಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿದರು. ‘ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿಯೂ ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಮಳೆ ಹಾಗೂ ಶೀತ ವಾತಾವರಣದಿಂದ ಕಳೆಗುಂದಿರುವ ಕಾಲೇಜು ಕಟ್ಟಡವನ್ನು ನವೀಕರಿಸಬೇಕು. ಕ್ಯಾಂಟೀನ್ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಪ್ರಾಚಾರ್ಯ ವೈ.ಎನ್.ದೊಡ್ಡಮನಿ ತಿಳಿಸಿದರು.
ಶಾಸಕ ಅನಿಲ ಬೆನಕೆ ಅವರೊಂದಿಗೆ ಚರ್ಚಿಸಿ, ನವೀಕರಣಕ್ಕೆ ಪ್ರಸ್ತಾವ ಕಳುಹಿಸುವಂತೆ ಸಚಿವರು ಸೂಚಿಸಿದರು.
ಮಹಿಳಾ ಸರ್ಕಾರಿ ಪದವಿ ಕಾಲೇಜಿಗೂ ಭೇಟಿ ನೀಡಿದರು. ‘ಕೋವಿಡ್ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು’ ಎಂದು ತಿಳಿಸಿದರು.
ಆರ್ಸಿಯು ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲಿಸಿದರು. ‘ಕಾಲೇಜಿನ ಪಕ್ಕದಲ್ಲಿರುವ ಜಾಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸುರ, ಕಾಲೇಜಿನ ಪ್ರಾಚಾರ್ಯ ಡಾ.ಎಂ. ಜಯಪ್ಪ, ಉಪಪ್ರಾಚಾರ್ಯ ಅನಿಲ ರಾಮದುರ್ಗ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.