ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಸೇರಿದಂತೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದರೂ ಅಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸಬಾರದು’ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾ ಪಂಚಾಯಿತಿವರೆಗೆ ಮೆರವಣಿಗೆ ನಡೆಸಿದ ಅವರು, ಸಿಇಒ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿದರು. ನಂತರ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಕಚೇರಿಗೆ ತೆರಳಿ ಅವರಿಗೂ ಹಕ್ಕೊತ್ತಾಯ ಮನವಿ ನೀಡಿದರು.
‘ಪಟ್ಟಣ ಪಂಚಾಯಿತಿಗಳಾಗುವುದಕ್ಕಿಂತ ಮುಂಚೆ ಆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರಾರು ಮಂದಿ ಉದ್ಯೋಗ ಚೀಟಿ ಪಡೆದು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ, ಮೇಲ್ದರ್ಜೆಗೇರಿದ ಕಾರಣಕ್ಕೆ ಅವರಿಂದ ಕೆಲಸ ಕಿತ್ತುಕೊಳ್ಳುವುದು ಸರಿಯಲ್ಲ. ನೂರಾರು ಕುಟುಂಬಗಳಿಗೆ ಆಸರೆಯಾಗಿರುವ ಯೋಜನೆಯನ್ನು ಅಲ್ಲಿ ಸ್ಥಗಿತಗೊಳಿಸುವುದು ಸಮಂಜಸವಲ್ಲ’ ಎಂದು ತಿಳಿಸಿದರು.
‘ಪೀರನವಾಡಿ ವ್ಯಾಪ್ತಿಯಲ್ಲಿ 500 ಮಂದಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿದ್ದಾರೆ. ಅವರಿಗೆ ಯಾವುದೇ ರೀತಿ ಅನ್ಯಾಯ ಆಗಲು ಬಿಡಬಾರದು. ಆ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲೂ ಖಾತ್ರಿ ಯೋಜನೆ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಸಂಘಟನೆಯ ಸಂಸ್ಥಾಪಕ ಸದಸ್ಯ ದಿಲೀಪ ಕಾಮತ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.