ADVERTISEMENT

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 14:34 IST
Last Updated 1 ಫೆಬ್ರುವರಿ 2021, 14:34 IST
ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಮನವಿ ಸಲ್ಲಿಸಿದರು
ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ದೇವಾಂಗ ಸಮಾಜದ ನೆರವಿಗೆ ಸರಕಾರ ತುರ್ತಾಗಿ ಧಾವಿಸಬೇಕು. ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ 30 ಲಕ್ಷಕ್ಕಿಂತಲೂ ಹೆಚ್ಚಿನ ದೇವಾಂಗ ಸಮಾಜದವರು ಇದ್ದಾರೆ. ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಳೇಭಾವಿ ಗ್ರಾಮದಲ್ಲಿ ಅಧಿಕವಾಗಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳು ಮತ್ತು ಬೆಳಗಾವಿ ನಗರದಲ್ಲೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅವರು ಆರ್ಥಿಕ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದಾರೆ. ಕೊರೊನಾ ಸಂದರ್ಭದಲ್ಲಿ ಮತ್ತು ಹಿಂದಿನ 2 ವರ್ಷ ಅಪ್ಪಳಿಸಿದ ಪ್ರವಾಹದಿಂದಾಗಿ ಅವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉದ್ಯೋಗ ಮಾಡಲೂ ಆಗದೆ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆಯೂ ಸಿಗದೆ ಪರದಾಡುವಂತಾಗಿದೆ. ಆದ್ದರಿಂದ ಅವರಿಗೆ ಸ್ಪಂದಿಸಬೇಕು’ ಎಂದು ಕೋರಿದರು.

‘ಈ ಹಿಂದೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ದೇವಾಂಗ ಸಮಾಜಕ್ಕೆ ಮೀಸಲಾತಿ ಇತ್ತು. ಕೆಲವು ವರ್ಷಗಳ ಹಿಂದೆ ಅದನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಆಂಧ್ರ ಮಾದರಿಯಲ್ಲಿ ನಿಗಮ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.