ADVERTISEMENT

ರಾಜ್ಯೋತ್ಸವ: ಅದ್ಧೂರಿ ಮೆರವಣಿಗೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 5:46 IST
Last Updated 24 ಅಕ್ಟೋಬರ್ 2021, 5:46 IST

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಅದ್ಧೂರಿ ಮೆರವಣಿಗೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಂದರ್ಭ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಮುಖಂಡರು, ‘ಗಡಿ ನಾಡಿನಲ್ಲಿ ನಡೆಯುವ ರಾಜ್ಯೋತ್ಸವ ವಿಶೇಷವಾಗಿದೆ. ಕೋವಿಡ್ ನೆಪ ಹೇಳದೆ ಅದ್ಧೂರಿಯಾಗಿ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.

‘ಕೋವಿಡ್ ಹಿನ್ನೆಲೆಯಲ್ಲಿ, ರಾಜ್ಯೋತ್ಸವ ಮೆರವಣಿಗೆ ಸಂಬಂಧ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಶೀಘ್ರವೇ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ADVERTISEMENT

ಕಸ್ತೂರಿ ಪಾದಯಾತ್ರೆ:

‘ಬೆಳಗಾವಿ ಮಹಾನಗರಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜ ಹಾರಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ’ ಎಂದು ಶಪಥ ಮಾಡಿ ಹೋರಾಟ ನಡೆಸಿದ್ದ ಕನ್ನಡಪರ ಹೋರಾಟಗಾರ್ತಿ ಕಸ್ತೂರಿ ಬಾವಿ ಅವರು ರಾಜ್ಯೋತ್ಸವ ಅದ್ಧೂರಿಯಾಗಿ ನಡೆಸಲು ಅನುಮತಿ ಕೊಡುವಂತೆ ಆಗ್ರಹಿಸಿ ಬೆಳಗಾವಿಯಿಂದ ಚನ್ನಮ್ಮನ ಕಿತ್ತೂರುವರೆಗೆ ಪಾದಯಾತ್ರೆ ನಡೆಸಿ ಗಮನಸೆಳೆದಿದ್ದಾರೆ. ಬಳಿಕ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.