ಬೆಳಗಾವಿ: ‘ಕೇಂದ್ರ ಸರ್ಕಾರವು ರಸಗೊಬ್ಬರಗಳ ದರ ಹೆಚ್ಚಿಸಿ ಕೃಷಿ ವಲಯಕ್ಕೆ ಮತ್ತೊಂದು ಆಘಾತ ನೀಡಿದೆ’ ಎಂದು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಮೂರು ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದೇಶದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ಅವುಗಳನ್ನು ಹಿಂಪಡೆಯದೆ ರಸಗೊಬ್ಬರಗಳ ದರ ದುಬಾರಿ ಮಾಡಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದ್ದಾರೆ.
‘ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಧಾರಣೆ ಗಣನೀಯವಾಗಿ ಕುಸಿತ ಕಂಡು ರೈತ ಸಮುದಾಯ ಆರ್ಥಿಕವಾಗಿ ಚೇತರಿಸಿಕೊಳ್ಳುವ ಯಾವುದೇ ಮುನ್ಸೂಚನೆ ಕಂಡುಬರುತ್ತಿಲ್ಲ. ಪ್ರಸ್ತುತ ಕೋವಿಡ್-19 ಹಿನ್ನಲೆಯಲ್ಲಿ ರೈತರು ಅನುಭವಿಸಿದಷ್ಟು ಹಾನಿಯನ್ನು ಬೇರಾವ ವಲಯದವರೂ ಕಂಡಿಲ್ಲ. ಇದೇ ರೀತಿ ಮುಂದುವರಿದರೆ ಕೃಷಿ ಬಿಕ್ಕಟ್ಟು ಎದುರಿಸಲಾಗದೆ ಆಹಾರ ಉತ್ಪನ್ನಗಳ ಕುಸಿತದಿಂದ ದೇಶವು ಆಹಾರದ ಬಿಕ್ಕಟ್ಟನ್ನು ಎದುರಿಸುವಂಥ ಪರಿಸ್ಥಿತಿ ಬರಲಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
‘ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು, ಕೃಷಿ ವಲಯ ಚೇತರಿಸಿಕೊಳ್ಳಲು ರಸಗೊಬ್ಬರಗಳ ಧಾರಣೆಯನ್ನು ಮೊದಲಿನಂತೆ ನಿಗದಿಗೊಳಿಸಬೇಕು. ಸಕಾಲಕ್ಕೆ ಉತ್ತಮ ಗುಣಮಟ್ಟದ ರಸಗೊಬ್ಬರ ಸಮರ್ಪಕವಾಗಿ ಪೂರೈಸಬೇಕು. ಇಲ್ಲವಾದಲ್ಲಿ ಮೇ 10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.