ADVERTISEMENT

‘ಸ್ವಚ್ಛತೆ ಕಾಪಾಡಿ, ಡೆಂಗಿ ನಿಯಂತ್ರಿಸಿ’

​ಪ್ರಜಾವಾಣಿ ವಾರ್ತೆ
Published 21 ಮೇ 2022, 14:05 IST
Last Updated 21 ಮೇ 2022, 14:05 IST
ಬೆಳಗಾವಿಯ ವಡಗಾವಿಯಲ್ಲಿ ಹಮ್ಮಿಕೊಂಡಿದ್ದ ಡೆಂಗಿ ಜಾಗೃತಿ ಜಾಥಾಕ್ಕೆ ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಚಾಲನೆ ನೀಡಿದರು
ಬೆಳಗಾವಿಯ ವಡಗಾವಿಯಲ್ಲಿ ಹಮ್ಮಿಕೊಂಡಿದ್ದ ಡೆಂಗಿ ಜಾಗೃತಿ ಜಾಥಾಕ್ಕೆ ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಚಾಲನೆ ನೀಡಿದರು   

ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’ ಎಂದು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಟಿಎಚ್‌ಒ ಕಾರ್ಯಾಲಯಗಳ ಸಹಯೋಗದಲ್ಲಿ ಇಲ್ಲಿನ ವಡಗಾವಿಯ ಮಾಧವಾಪುರದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಳೆಯಾದಾಗ ಡೆಂಗಿ, ಮಲೇರಿಯಾ, ಚಿಕೂನ್ ಗುನ್ಯದಂತಹ ರೋಗಗಳು ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಸ್ವಚ್ಛತೆಯ ಕಡೆಗೆ ಗಮನಹರಿಸಬೇಕು. ಮನೆಯ ಸುತ್ತಮುತ್ತ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ರೋಗಗಳ ಹರಡುವಿಕೆ ತಡೆಯುವಲ್ಲಿ ಸಮುದಾಯದ ಪಾತ್ರ ದೊಡ್ಡದಿದೆ’ ಎಂದರು.

ADVERTISEMENT

ಟಿಎಚ್‌ಒ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿ, ‘ಡೆಂಗಿ ಮಾರಣಾಂತಿಕ ಕಾಯಿಲೆಯಾಗಿದೆ. ತಲೆ ನೋವು, ತೀವ್ರ ಜ್ವರ, ಕಣ್ಣಿನ ಹಿಂಭಾಗ ನೋವು, ವಾಕರಿಕೆ, ಮಾಂಸ ಖಂಡಗಳಲ್ಲಿ ಸೆಳೆತ ಕಾಣಿಸಿಕೊಳ್ಳುವುದು ರೋಗದ ಲಕ್ಷಣವಾಗಿದೆ. ಇದನ್ನು ನಿರ್ಲಕ್ಷಿಸಬಾರದು. ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಮಾಹಿತಿ ನೀಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕವಿತಾ ಕುಂಬಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ ಎಲ್. ಪಾತಲಿ, ಹಿರಿಯ ಅರೋಗ್ಯ ಸುರಕ್ಷಾಧಿಕಾರಿ ಅಕ್ಕಮಹಾದೇವಿ ಶಿವಮೂರ್ತಿಮಠ, ಟಿ.ಸಿ.ಎಂ. ಹಾಗೂ ನಿರೀಕ್ಷಣಾಧಿಕಾರಿ ರಾಜೇಶ್ವರಿ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.