ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ, ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿಯ ಎಚ್ವಿಎಚ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯರಾದ ಎಂ.ಆರ್. ಮಗದುಮ್ಮ, ಶಿಕ್ಷಕರಾದ ಡಿ.ಪಿ. ಕಾಪ್ಸಿ, ಎ.ಬಿ. ಪಾಟೀಲ ಹಾಗೂ ಅಲಕನೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪಿ.ಬಿ. ಪಾಲಯ್ಯ ಅವರನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ.
‘ಈ ಬಗ್ಗೆ ರಾಯಬಾಗ ಬಿಇಒ ದೂರು ನೀಡಿದ್ದರು. ಆರೋಪಿಗಳು, ಗಣಿತ ಪರೀಕ್ಷೆಯ ವೇಳೆ ಉತ್ತರಗಳನ್ನು ಹಾಳೆಯಲ್ಲಿ ಬರೆದು ವಿದ್ಯಾರ್ಥಿಗಳಿಗೆ ಹಂಚುತ್ತಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಪೂರ್ಣಗೊಂಡ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ್ ರೆಡ್ಡಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.