ADVERTISEMENT

ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 7:46 IST
Last Updated 6 ನವೆಂಬರ್ 2020, 7:46 IST
ಸಂಜಯ ಪಾಟೀಲ
ಸಂಜಯ ಪಾಟೀಲ   

ಬೆಳಗಾವಿ: ‘ಪಕ್ಷ ವಿರೋಧಿ ಚಟುವಟಿಕೆ ಕಾರಣದಿಂದಾಗಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ದೇವಪ್ಪ ಪೂಜೇರ ಅವರನ್ನು ಉಚ್ಛಾಟಿಸಲಾಗಿದೆ’ ಎಂದು ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.

ಸವದತ್ತಿ–ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನವಳ್ಳಿ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ವಿಜಯ ಅಮಠೆ ವಿರುದ್ಧ ಅವರು ಕೆಲಸ ಮಾಡಿದ್ದಾರೆ. ತಾಯಿ ಪಾರ್ವತಿ ಪೂಜೇರ ಅವರನ್ನು ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಿ ಬೆಂಬಲಿಸಿದ್ದಾರೆ. ಈ ಬಗ್ಗೆ ಅಲ್ಲಿನ ಶಾಸಕರೂ ಆದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಪತ್ರ ಬರೆದಿದ್ದರು. ಸವದತ್ತಿ ಮಂಡಲದ ಅಧ್ಯಕ್ಷ ಈರಣ್ಣ ಚಂದರಗಿ ಸೂಚನೆಯನ್ನೂ ಧಿಕ್ಕರಿಸಿ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಪಕ್ಷದ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT