ADVERTISEMENT

ಬೆಳಗಾವಿ | 'ಪಂಚ ಗ್ಯಾರಂಟಿ: ಶೀಘ್ರ ದೋಷ ತಿದ್ದಿಕೊಳ್ಳಿ'

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ವಿನಯ ನಾವಲಗಟ್ಟಿ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 2:48 IST
Last Updated 2 ಆಗಸ್ಟ್ 2025, 2:48 IST
ಬೆಳಗಾವಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ವಿನಯ ನಾವಲಗಟ್ಟಿ ಹಾಗೂ ಮುಖಂಡರು ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು
ಬೆಳಗಾವಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ವಿನಯ ನಾವಲಗಟ್ಟಿ ಹಾಗೂ ಮುಖಂಡರು ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು   

ಬೆಳಗಾವಿ: ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷರು ಕೈ ಜೋಡಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಅರ್ಹ ಫಲಾನುಭವಿಗಳಗೆ ಯೋಜನೆಗಳು ಸಿಗುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ‘ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಬೇಕು. ಅದೇ ರೀತಿಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರು ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಯೋಜನೆಯಿಂದ ಹೊರಗುಳಿದವರಿಗೆ ಯೋಜನೆಗಳು ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ, ‘ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿದ್ದು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯಲ್ಲಿ 1,865 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ. ಅಂತ್ಯೋದಯ 67,704 ಹಾಗೂ ಪಿ.ಎಚ್.ಎಚ್, 10,73,772 ಸೇರಿ ಒಟ್ಟು 11.41 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ. ಅನ್ನಭಾಗ್ಯ ಯೋಜನೆಯಡಿ ಒಟ್ಟು 39,48,770 ಫಲಾನುಭವಿಗಳು ಪ್ರತಿ ಮಾಹೆ ಉಚಿತವಾಗಿ ಪಡಿತರ ಆಹಾರಧಾನ್ಯದ ಸದುಪಯೋಗ ಪಡೆಯುತ್ತಿದ್ದಾರೆ’ ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಹೇಳಿದರು.

‘ಆಗಸ್ಟ್ 2023 ರಿಂದ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಒಂದು ವೇಳೆ ಅರ್ಹ ಯೂನಿಟ್ ಬಳಕೆ ಕ್ಕಿಂತ ಕಡಿಮೆ ಬಳಕೆ ಮಾಡಿದಲ್ಲಿ ಶೂನ್ಯ ಬಿಲ್ ನೀಡಲಾಗುತ್ತಿದೆ’ ಎಂದು ಹೆಸ್ಕಾಂ ಅಧಿಕಾರಿಗಳು ವಿವರಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು, ಎಲ್ಲ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಬಿ. ಎಂ ಮುರುಘಾಮಠ, ವಿಕ್ರಮ ಜಾಧವ, ಪ್ರಶಾಂತ ಕಲ್ಲಪ್ಪಗೌಡರ ಸಭೆಯಲ್ಲಿ ಹಾಜರಿದ್ದರು.

ಜಿಲ್ಲೆಯಲ್ಲಿ 1,865 ನ್ಯಾಯಬೆಲೆ ಅಂಗಡಿಗಳಿವೆ 11.41 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ ಅನ್ನಭಾಗ್ಯ ಯೋಜನೆಯಡಿ 39,48,770 ಫಲಾನುಭವಿಗಳಿಗೆ ಧಾನ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.