ಬೆಳಗಾವಿ:ಹಿಂಗಾರು ಬೆಳೆ ನಷ್ಟದ ಬಗ್ಗೆ ಜಂಟಿ ಅಧಿಕಾರಿಗಳು ನಡೆಸಿದ ಸಮೀಕ್ಷೆ ಬಹುತೇಕ ಕಡೆ ಪೂರ್ಣಗೊಂಡಿದೆ. ಇದನ್ನು ಕ್ರೋಢೀಕರಿಸಿ ಫೆಬ್ರುವರಿ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು.
ತಾಲ್ಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಬರ ಪರಿಹಾರ ಯೋಜನೆಯಡಿ ಹಸಿರು ಮೇವು ಉತ್ಪಾದನೆ ಮಾಡಿರುವುದನ್ನು ಮಂಗಳವಾರ ಬೆಳಿಗ್ಗೆ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂಗಾರು ಅವಧಿಯಲ್ಲಿ ರಾಜ್ಯದ 156 ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಣೆ ಮಾಡಿದ್ದೇವೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಅನುದಾನ ಒದಗಿಸಲಾಗುತ್ತಿದೆ. ನೀರು ಪೂರೈಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ತಂಡಗಳಿಗೆ ₹ 25 ಲಕ್ಷ ನೀಡಲಾಗಿದೆ. ಮೇವು ಪೂರೈಸಲು ಕೃಷಿ ಇಲಾಖೆಗೆ ₹ 25 ಕೋಟಿ ನೀಡಲಾಗಿದೆ ಎಂದು ವಿವರಿಸಿದರು.
ನೀರಿನ ಸೌಲಭ್ಯ ಇರುವ ರೈತರಿಗೆ ಮೇವು ಬೀಜಗಳ ಕಿಟ್ ನೀಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 78,632 ಕಿಟ್ ನೀಡಲಾಗಿದೆ. ಅವಶ್ಯಕತೆ ಇರುವ ಕಡೆಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅನುದಾನ ಕೋರಿಕೆ:ಮುಂಗಾರು ಅವಧಿಯಲ್ಲಿ ರಾಜ್ಯದ 100 ತಾಲ್ಲೂಕುಗಳಲ್ಲಿ ಬರ ಆವರಿಸಿತ್ತು. ₹ 2,400 ಕೋಟಿ ಬೆಳೆ ನಷ್ಟ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.