
ಬೆಳಗಾವಿ: ‘ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಶಾಲೆಗಳ ಸುಧಾರಣೆ ಜತೆಗೆ, ಪರಿಣಾಮಕಾರಿಯಾಗಿ ಕನ್ನಡ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಹೋರಾಟಗಾರರೊಂದಿಗೆ ಶನಿವಾರ ನಡೆದ ಚಿಂತನ-ಮಂಥನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಕಡ್ಡಾಯವಾಗಿ ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಸಹಕಾರಿ ಸಂಘ-ಸಂಸ್ಥೆಗಳಿಗೆ ಸೂಚಿಸಲಾಗಿದೆ. ನಿಯಮ ಪಾಲಿಸದವರಿಗೆ ನೋಟಿಸ್ ನೀಡಲಾಗುವುದು. ಸರ್ಕಾರಿ ನಿಯಮಾನುಸಾರ ನಾಡಗೀತೆ ಹಾಡದ ಖಾಸಗಿ ಇಂಗ್ಲಿಷ್ ಮತ್ತು ಮರಾಠಿ ಮಾಧ್ಯಮ ಶಾಲೆಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ‘ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ 40 ಸಾವಿರ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಈ ಬಗ್ಗೆ ಸರ್ಕಾರದ ಗಮನಸೆಳೆಯಲು ಜಿಲ್ಲಾಧಿಕಾರಿ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.
ವಾಜೀದ್ ಹಿರೇಕೋಡಿ, ‘ಇಂಥ ಸಭೆಗಳು ನಿರಂತರವಾಗಿ ನಡೆಯಬೇಕು. ಮೂಲಸೌಕರ್ಯ ಕೊರತೆಯಿಂದ ಬಳಲುತ್ತಿರುವ ಕನ್ನಡ ಶಾಲೆಗಳಲ್ಲಿ ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಶ್ರೀನಿವಾಸ ತಾಳೂಕರ, ‘ಬೆಳಗಾವಿ ಮಹಾನಗರದಲ್ಲಿ ಪರಿಣಾಮಕಾರಿ ಕನ್ನಡ ಅನುಷ್ಠಾನಕ್ಕೆ ಪಾಲಿಕೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.
ಮಹಾದೇವ ತಳವಾರ, ‘ನಾಡಗೀತೆ ಬಳಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮವಾಗಲೇಬೇಕು. ವಿನಾಕಾರಣ ಕನ್ನಡ ಹೋರಾಟಗಾರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಚರ್ಚಿಸಬೇಕು’ ಎಂದು ಒತ್ತಾಯಿಸಿದರು.
ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.