ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ
ಚಿಕ್ಕೋಡಿ: ಪ್ರಧಾನಿ ಸಾವು ಹಾಗೂ ಕಾಂಗ್ರೆಸ್ಗೆ ಮತ ನೀಡದಿದ್ದರೆ ವಿದ್ಯುತ್ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್ ನೀಡಿದ್ದಾರೆ.
‘ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ರಾಹುಲ್ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ ಪ್ರಚಾರದ ವೇಳೆ, ‘ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ಏಕೆ ಮೋದಿ...ಮೋದಿ... ಎಂದು ಕೂಗುತ್ತೀರಿ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹರಿಹಾಯ್ದಿದ್ದರು.
ಕಾಗವಾಡ ತಾಲ್ಲೂಕಿನ ಮಂಗಾವತಿ ಮತ್ತು ಜುಗುಳ ಗ್ರಾಮಗಳಲ್ಲಿ ಪ್ರಚಾರ ಮಾಡಿ ಮಾತನಾಡಿದ ಭರಮಗೌಡ (ರಾಜು) ಕಾಗೆ, ‘ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ನಿರೀಕ್ಷಿತ ಮತ ಬರದೇ ಇದ್ದರೆ ನಿಮ್ಮೂರಿನ ವಿದ್ಯುತ್ ಕಡಿತಗೊಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದರು.
ಈ ಸಂಬಂಧ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.