ಬೆಳಗಾವಿ:ಉಪ ಚುನಾವಣೆ ನಮಗೆ ಮಹತ್ತರವಾದ ಚುನಾವಣೆ ಯಾಗಿದೆ. ಈಗಾಗಲೇ 15 ಕ್ಷೇತ್ರಗಳಿಗೂ ಸಚಿವರನ್ನು ಉಸ್ತುವಾರಿಗಳನ್ನಾಗಿ ಹಾಕಿದ್ದೇನೆ. ಎಲ್ಲ ಸೀಟುಗಳನ್ನೂ ಗೆಲ್ಲುತ್ತೇವೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಲ್ಲಿ ಪತ್ರಕರ್ತರ ಜತೆ ಬುಧವಾರ ಮಾತನಾಡಿದ ಅವರು, ಅನರ್ಹ ಶಾಸಕರ ವಿಷಯದಲ್ಲಿ ಅಪಪ್ರಚಾರಕ್ಕೆ ಕಿವಿಕೊಡುವ ಅಗತ್ಯವಿಲ್ಲ. ಅ.22ರಂದು ಸುಪ್ರೀಂ ಕೋರ್ಟ್ ನೀಡುವ ತೀರ್ಪು ಆಧರಿಸಿ ನಮ್ಮ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುತ್ತೇವೆ. ಮಾಸಾಂತ್ಯದಿಂದ ನಮ್ಮ ಚುನಾವಣಾ ಪ್ರಚಾರ ಶುರು ಮಾಡುತ್ತೇವೆ ಎಂದು ಹೇಳಿದರು.
ಹಿಂದಿನ ಸರ್ಕಾರ ಸಾಲ ಮನ್ನಾ ಮಾಡಿದ್ದೇ ದೊಡ್ಡ ಭಾರವಾಗಿದೆ. ಅದನ್ನು ಅನುಷ್ಠಾನಕ್ಕೆ ತರಲು ಬೇಕಾದ ಪ್ರಯತ್ನ ಮಾಡುತ್ತೇನೆ. ನೆರೆ ಬಾಧಿತ ಪ್ರದೇಶಗಳಿಗಾಗಿ ಎಲ್ಲ ಹಣವನ್ನೂ ಕೊಡಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಪರಿಹಾರ ಕೊಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಸ್ಥಳಾಂತರಕ್ಕೆ ಸಿದ್ಧವಿರುವ ಗ್ರಾಮಗಳ ಜನರನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಿಸಿ ಮನೆಗಳನ್ನು ಕಟ್ಟಿ ಕೊಡಲು ಸಿದ್ಧವಿದ್ದೇವೆ ಎಂದರು.
ಸಾಲ ಮನ್ನಾ ಯೋಜನೆ ಮುಂದುವರಿಕೆ
ಹಿಂದಿನ ಸರ್ಕಾರ ಮಾಡಿರುವ ಸಾಲ ಮನ್ನಾ ಯೋಜನೆಯನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಅದಕ್ಕೆ ಅಡ್ಡಿಪಡಿಸುವುದಿಲ್ಲ. ಹೊಸದಾಗಿ ಸಾಲ ಮನ್ನಾ ಮಾಡಲು ಪರಿಸ್ಥಿತಿ ಸರಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ನೀರಾವರಿ ನಮ್ಮ ಆದ್ಯತೆಯಾಗಿದೆ. ಮಹದಾಯಿ ಸೇರಿದಂತೆ ಎಲ್ಲ ವಿವಾದವನ್ನೂ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ಮುಗಿದ ನಂತರ ನೆರೆಯ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಸಮಾಲೋಚನೆ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.