ಬೆಳಗಾವಿ: ‘ನಿಸರ್ಗದಲ್ಲಿರುವ ಲಕ್ಷಾಂತರ ಜೀವಿಗಳಂತೆ ಮನುಷ್ಯನೂ ಒಂದು ಸಾಮಾನ್ಯ ಜೀವಿ. ಇತರ ಜೀವಿಗಳಂತೆ ಮಾನವನೂ ಪ್ರಕೃತಿಯ ನಿಯಮಗಳನ್ನು ಪಾಲಿಸಿದರೆ ಅಕಾಲಿಕ ಮಳೆ, ನೈಸರ್ಗಿಕ ವಿಕೋಪದಂತಹ ಸಮಸ್ಯೆಗಳಿಗೆ ತುತ್ತಾಗುತ್ತಿರಲಿಲ್ಲ’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ ಕಣದಾಳೆ ಹೇಳಿದರು.
ಇಲ್ಲಿನ ಡಾ.ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಇಕೊ ಕ್ಲಬ್ ಕುರಿತ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿಯೊಬ್ಬರೂ ಪರಿಸರ ಸ್ನೇಹಿಯಾಗಿ ಜೀವನ ಸಾಗಿಸಬೇಕು. ಏಕೆಂದರೆ, ಪರಿಸರ ಸಂರಕ್ಷಣೆ ಎಲ್ಲರ ಹೊಣೆ’ ಎಂದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ರಾಜಶ್ರೀ ಕುಳ್ಳಿ, ‘ಘನ ತ್ಯಾಜ್ಯವನ್ನು ಮೂಲದಲ್ಲೇ ಸಮರ್ಪಕವಾಗಿ ವಿಲೇವಾರಿ ಮಾಡದೇ ಹೋದರೆ ಅದು ಪರಿಸರ, ಆರೋಗ್ಯ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ’ ಎಂದು ತಿಳಿಸಿದರು.
ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಮಾತನಾಡಿದರು. ಪರಿಸರ ಮಿತ್ರ ಸಂಘದ ಅಧ್ಯಕ್ಷ ಪ್ರೊ.ಜಿ.ಕೆ. ಖಡಬಡಿ ಅಧ್ಯಕ್ಷತೆ ವಹಿಸಿದ್ದರು. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಕುಮದಾ, ಮಾಲಿನ್ಯ ನಿಯಂತ್ರಣ ಮಂಡಳಿ ವೈಜ್ಞಾನಿಕ ಅಧಿಕಾರಿ ಡಾ.ಜಿ.ಎಂ. ಪಾಟೀಲ, ಕೃಪಾಲಿನಿ ಶಿಂಧೆ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.