
ರಾಯಬಾಗ: ತಾಲ್ಲೂಕಿನಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಇಲಾಖೆ ವಿಶೇಷ ಒತ್ತು ನೀಡಿದ್ದು, ಶಿಕ್ಷಕರಿಂದ ಮನೆಭೇಟಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಹೇಳಿದರು.
ತಾಲ್ಲೂಕಿನ ವಿವಿಧ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಮನೆಗಳಿಗೆ ನೇರವಾಗಿ ಭೇಟಿ ನೀಡುವುದರಿಂದ ಅವರ ಕಲಿಕಾ ಸ್ಥಿತಿ, ಕುಟುಂಬದ ಸಹಕಾರ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಮನೆಭೇಟಿಯ ಮೂಲಕ ಮಕ್ಕಳಲ್ಲಿ ಇರುವ ಪರೀಕ್ಷಾ ಭಯವನ್ನು ದೂರ ಮಾಡಿ, ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಶಿಕ್ಷಕರು ನೀಡುತ್ತಿರುವ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸುವಂತಾಗಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಪರೀಕ್ಷಾ ದೃಷ್ಟಿಯಿಂದ ಮೊಬೈಲ್–ಟಿವಿಗೆ ಸಮಯ ಮಿತಿ ವಿಧಿಸುವಂತೆ ಪಾಲಕರಿಗೆ ಬಿಇಒ ಬಸವರಾಜಪ್ಪ ಮನವಿ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಗೂ ಮುಂಬರುವ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ರಾಯಬಾಗ ತಾಲ್ಲೂಕಿನಾದ್ಯಂತ ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಕ್ಕಳಿಗಾಗಿ ಮೊಬೈಲ್ ಹಾಗೂ ಟಿವಿ ಬಳಕೆಯನ್ನು ನಿಯಂತ್ರಿಸುವಂತೆ ಪಾಲಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಮನವಿ ಮಾಡಿದರು.
ಇಂದಿನ ದಿನಗಳಲ್ಲಿ ಮೊಬೈಲ್ ಹಾಗೂ ಟಿವಿಯ ಅತಿಯಾದ ಬಳಕೆ ಮಕ್ಕಳ ಅಧ್ಯಯನಕ್ಕೆ ಅಡ್ಡಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾಲಕರು ಸ್ವಯಂ ಪ್ರೇರಿತರಾಗಿ ಮಕ್ಕಳ ಓದಿಗೆ ಅನುಕೂಲಕರ ವಾತಾವರಣ ನಿರ್ಮಿಸಬೇಕು. ಸಂಜೆ ಸಮಯವನ್ನು ಸಂಪೂರ್ಣವಾಗಿ ಪಠ್ಯಾಭ್ಯಾಸ, ಪುನರಾವಲೋಕನ ಹಾಗೂ ಪರೀಕ್ಷಾ ತಯಾರಿಗಾಗಿ ಮೀಸಲಿಡುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.