ರಾಮದುರ್ಗ: ಕೇವಲ ಕಾರ್ಯಕ್ರಮಗಳ ಸುದ್ದಿ ಮಾಡುವುದು ಪತ್ರಕರ್ತರ ಕೆಲಸವಾಗದೇ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕಿದೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್.ವಿ.ಕುಲಕರ್ಣಿ ಹೇಳಿದರು.
ಸ್ಥಳೀಯ ವಿಶ್ವಭಾರತಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ನಿವೃತ್ತ ಐಎಎಸ್ ಅಧಿಕಾರಿ ಸಿ. ಸೋಮಶೇಖರ ದತ್ತಿನಿಧಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮಲ್ಲಿಕಾರ್ಜುನರಡ್ಡಿ ಗೊಂದಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ಪತ್ರಿಕೆಗಳ ಪಾತ್ರ ಅಪಾರವಾಗಿದೆ. ವಿದ್ಯುನ್ಮಾನ ಮಾಧ್ಯಮಕ್ಕಿಂತ ಮುದ್ರಣ ಮಾಧ್ಯಮ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯ ಪ್ರೊ.ವಿ.ಎನ್.ಗೋಡಖಿಂಡಿ ಮಾತನಾಡಿ, ದಿನಪತ್ರಿಕೆಗಳು ಕೇವಲ ಸುದ್ದಿಗೆ ಮಾತ್ರ ಸೀಮಿತವಾಗಿಲ್ಲ. ಸುದ್ದಿಗಳ ಜೊತೆಗೆ ವೈವಿಧ್ಯಮಯವಾದ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ವಿಷಯಗಳು ಇರುತ್ತವೆ. ವಿದ್ಯಾರ್ಥಿಗಳು ಅಂತ ದಿನಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ನಿವೃತ್ತ ಪ್ರಾಚಾರ್ಯ ಪ್ರೊ.ವಿ.ಬಿ.ಸೋಮಣ್ಣವರ ಪ್ರಾಸ್ತಾವಿಕ ಮಾತನಾಡಿದರು.
ಪ್ರಾಚಾರ್ಯ ಅಶೋಕ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಜ್ಞಾನ ಪ್ರಬೋಧಿನಿ ವಿದ್ಯಾಲಯದ ಕಾರ್ಯದರ್ಶಿ ಗೋಪಾಲಕೃಷ್ಣ ಬಿಂದಗಿ, ಉಪನ್ಯಾಸಕರಾದ ವಿ.ಎಸ್.ಕಿಲಬನೂರ. ಆರ್.ಎಚ್.ಕರ್ಲೇಪ್ಪನರ, ಕವಿತಾ ಕುಲಕರ್ಣಿ ಇತರರು ಇದ್ದರು. ಉಪನ್ಯಾಸಕ ಆರ್.ಬಿ.ಸವಟಗಿ ಸ್ವಾಗತಿಸಿದರು. ಗೋಪಾಲ ರಾಠೋಡ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.