ಬೆಳಗಾವಿ: ‘ಪ್ರಸ್ತುತ ಸಂದರ್ಭದಲ್ಲಿ ಲಭ್ಯವಿರುವ ವೈಜ್ಞಾನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಆಧುನಿಕ ರೀತಿಯಲ್ಲಿ ಕೃಷಿ ಮಾಡುವ ಮೂಲಕ ಲಾಭ ಗಳಿಸಬಹುದು. ರೈತರು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಲಹೆ ನೀಡಿದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ಸೇರ್ಪಡೆ ಮತ್ತು ಕಿರು ಮಾರುಕಟ್ಟೆ ವಿಭಾಗದಿಂದ ಇಲ್ಲಿನ ಕೃಷಿ ಇಲಾಖೆ ಕಚೇರಿಯ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ರೈತರು ಬೆಳೆದ ಬೆಳೆಗಳಿಗೆ ಉತ್ತಮ ದರ ಒದಗಿಸುವುದು ಸೇರಿದಂತೆ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕೃಷಿಕರು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
ಸಕಾಲದಲ್ಲಿ ಸಾಲ ಮರುಪಾವತಿಸಿದ ಗ್ರಾಹಕರು, ಸಾಲ ವಸೂಲಾತಿಯಲ್ಲಿ ಸಾಧನೆ ಮಾಡಿದ ಬ್ಯಾಂಕಿನ ನೌಕರರು, ಅತ್ಯುತ್ತಮ ಬೆಳೆ ಪಡೆದು ಕೃಷಿಯಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತರು ಹಾಗೂ ಕೃಷಿ ಉತ್ಪಾದಕ ಸಂಘಟನೆಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಸಾಲಪತ್ರಗಳನ್ನು ವಿತರಿಸಲಾಯಿತು.
ಭಾರತೀಯ ಸ್ಟೇಟ್ ಬ್ಯಾಂಕಿನ ಹಣಕಾಸು ಸೇರ್ಪಡೆ ಮತ್ತು ಕಿರು ಮಾರುಕಟ್ಟೆ ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ಜಿ. ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆ ಉಪನಿರ್ದೇಶಕ ಎಚ್.ಡಿ. ಕೋಳೇಕರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟೆ, ಜಿಲ್ಲಾ ಮಾರಾಟ ಕೇಂದ್ರದ ಮುಖ್ಯ ವ್ಯವಸ್ಥಾಪಕ ಗುರುಪ್ರಸಾದ ಕಾಮತ್, ಕೃಷಿ ಅಭಿವೃದ್ಧಿ ಶಾಖೆ ವ್ಯವಸ್ಥಾಪಕ ಪುಷ್ಟರಾಮ್ ಗಣೇಶ್ ಮತ್ತು ರೈತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.