ADVERTISEMENT

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ 21ರಿಂದ ಬೆಳಗಾವಿಯಲ್ಲಿ ರೈತರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 6:07 IST
Last Updated 12 ಸೆಪ್ಟೆಂಬರ್ 2020, 6:07 IST
ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ಪದಾಧಿಕಾರಿಗಳ ಸಭೆ ನಡೆಯಿತು
ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ಪದಾಧಿಕಾರಿಗಳ ಸಭೆ ನಡೆಯಿತು   

ಬೆಳಗಾವಿ: ‘ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಮತ್ತು ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.21ರಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಲಾಗುವುದು’ ಎಂದು ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದರು.

ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಪ್ರಸಕ್ತ ಹಂಗಾಮಿನ ಕಬ್ಬು ದರ ನಿಗದಿಪಡಿಡಬೇಕು. ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು. ಕಬ್ಬು ಆಯುಕ್ತರ ಕಾರ್ಯಾಲಯವನ್ನು ಬೆಳಗಾವಿಯಲ್ಲೇ ಮುಂದುವರಿಸಬೇಕು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸರ್ಕಾರ ವಿತರಿಸಿದ ಕಳಪೆ ಗುಣಮಟ್ಟದ ಸೊಯಾಬೀನ್ ಬೀಜ ಪಡೆದ ರೈತರಿಗೆ ಪರಿಹಾರ ಧನ ವಿತರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲಾಗುವುದು’ ಎಂದರು.

‘2019-20ನೇ ಸಾಲಿನ ಮತ್ತು ಪ್ರಸ್ತುತ ವರ್ಷದ ಮುಂಗಾರಿನಲ್ಲಿ ಸುರಿದ ಅಪಾರ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಿಸಬೇಕು. ಪ್ರತಿ ವರ್ಷ ಪ್ರವಾಹಕ್ಕೆ ಸಿಲುಕುವ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಿಸಬೇಕು. ಖಾದಿ ಮತ್ತು ಇನ್ನಿತರ ಕೈಮಗ್ಗ ಹಾಗೂ ವಿದ್ಯುತ್ ಮಗ್ಗಗಳಲ್ಲಿ ಚರಕ ನೂಲುವ, ನೇಯುವ ಕೂಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ₹ 5ಸಾವಿರ ಗೌರವಧನ ನೀಡಬೇಕು’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ನಾಗಯ್ಯ ಪೂಜಾರ ತಿಳಿಸಿದರು.

ADVERTISEMENT

ಮಹಿಳಾ ಘಟಕದ ಅಧ್ಯಕ್ಷೆ ಮೀರಾ ಭೀರಣ್ಣವರ, ಉಪಾಧ್ಯಕ್ಷೆ ಶಕುಂತಲಾ ತೇಲಿ, ನಿರ್ದೇಶಕ ಎಂ.ಎಂ. ಪೀರಜಾದೆ, ಈರಪ್ಪ ಲಕಮೋಜಿ, ಯಲ್ಲಪ್ಪ ಘಂಟಿ, ಬಸವಣ್ಣಿ ಕಡೆಮನಿ, ನಿಂಗಪ್ಪ ತುಳಜಿ, ಅರ್ಜುನ ಗಾವುಡ, ನೂರಪ್ಪ ಮಾದರ, ಮೃತ್ಯುಂಜಯ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.