ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಇಲ್ಲಿನ ಭೇಟಿ ನೀಡುತ್ತಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ ಚರ್ಚೆಗೆ ಬರುವಂತೆ ಆಗ್ರಹಿಸಿ ರೈತರು ನಗರದಲ್ಲಿ ಭಾನುವಾರ ಪ್ರತಿಭಟನೆ ಆರಂಭಿಸಿದ್ದಾರೆ.
ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ರೈತ ಮುಖಂಡರು, ಕೇಂದ್ರದ ರೈತ ವಿರೋಧಿ ಧೋರಣೆ ವಿರುದ್ಧ ಧಿಕ್ಕಾರ ಕೂಗಿದರು. ಇಬ್ಬರು ರೈತರು ಅರೆಬೆತ್ತಲೆಯಾಗಿ ಉರುಳುಸೇವೆ ಮಾಡಿದರು.
ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದಾರೆ.
ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಚಳವಳಿ ತೀವ್ರಗೊಂಡಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬೇಡಿಕೆ ಈಡೇರಿಸಲು ಕ್ರಮ ವಹಿಸಿಲ್ಲ. ರೈತರ ಭವಿಷ್ಯದ ವಿಷಯದಲ್ಲೂ ಹಟಮಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ವಿವಾದಿತ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನ, ಗೊಂದಲಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು ಸಂವಾದ ನಡೆಸಿ ಬಗೆಹರಿಸಬೇಕು ಎಂದು ಸಂಚಾಲಕ ಚೂನಪ್ಪ ಪೂಜಾರಿ ಒತ್ತಾಯಿಸಿದರು.
ರೈತರಿಗೆ ಮನವರಿಕೆ ಮಾಡಿಕೊಡಲು ಆಗದಿದ್ದರೆ ಅವರು ಜನರ ಕ್ಷಮೆ ಯಾಚಿಸಬೇಕು. ಬಿಜೆಪಿ ಸಮಾವೇಶದಲ್ಲಿ ಭಾಗವಹಿಸದೆ ವಾಪಸಾಗಬೇಕು ಎಂದು ಆಗ್ರಹಿಸಿದರು.
ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿದರು.
ಬಿಜೆಪಿಯಿಂದ ಆಯೋಜಿಸಿರು ಜನಸೇವಕ ಸಮಾರೋಪ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆ ಪಕ್ಷದ ನಾಯಕರ ದಂಡೇ ಇಲ್ಲಿಗೆ ಬರುತ್ತಿದೆ. ಈ ಕಾರಣದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.