ADVERTISEMENT

ರೈತರ ಸಾಲ ಮನ್ನಾಕ್ಕೆ ಆಗ್ರಹ

ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವಂತೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 14:16 IST
Last Updated 12 ಫೆಬ್ರುವರಿ 2020, 14:16 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಪ್ರತಿ ರೈತರ ₹ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು’ ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

‘2020–21ನೇ ಸಾಲಿನ ಬಜೆಟ್‌ನಲ್ಲಿ ರೈತರು, ನೆರೆ ಸಂತ್ರಸ್ತರು, ಮಹದಾಯಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ಕೊಡಬೇಕು. ನಮ್ಮ ಸರ್ಕಾರ ಬಂದಲ್ಲಿ ರೈತರ ₹ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಲಾಗುವುದು ಎಂದು ಬಿ.ಎಸ್. ಯಡಿಯೂರಪ್ಪ ಅವರು ನೀಡಿದ್ದ ಭರವಸೆಯನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಅಶೋಕ ಯಮಕನಮರಡಿ ಮಾತನಾಡಿ, ‘ತಾರತಮ್ಯವಿಲ್ಲದೇ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು. ಸಾಲ ಮರುಪಾವತಿಸುವಂತೆ ಬ್ಯಾಂಕ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳು ನೋಟಿಸ್‌ ಜಾರಿಗೊಳಿಸುವುದನ್ನು ಮತ್ತು ಕಿರುಕುಳ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. 2019–20ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಕೇಂದ್ರ ಸರ್ಕಾರ ಘೋಷಿಸಿದಷ್ಟು ಹಣವನ್ನು ಸಕ್ಕರೆ ಕಾರ್ಖಾನೆಗಳವರು ನೀಡಿಲ್ಲ. ಸರ್ಕಾರ ಕೂಡಲೇ ಇದನ್ನು ಗಮನಿಸಬೇಕು. ಕಡಿಮೆ ಹಣ ಪಾವತಿಸಿದ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಹಿಂದಿನ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆಗೆ ಅಗತ್ಯವಾದ ಹಣವನ್ನು ಸರ್ಕಾರ ಒದಗಿಸಬೇಕು. ಬರ, ನೆರೆಯಿಂದ ನೊಂದಿರುವ ರೈತರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ನೆರೆ ಹಾನಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಇದರಿಂದಾಗಿ ಬಹಳಷ್ಟು ಮಂದಿಗೆ ಪರಿಹಾರವೇ ದೊರೆತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮರು ಸಮೀಕ್ಷೆ ನಡೆಸಿ, ಹೊಸ ಬದುಕು ಕಟ್ಟಿಕೊಳ್ಳಲು ಸಂತ್ರಸ್ತರಿಗೆ ನೆರವಾಗಬೇಕು’ ಎಂದು ಕೋರಿದರು.

‘ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆಯ ಕಾಮಗಾರಿ ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಯಲ್ಲಪ್ಪ, ಗಂಗಪ್ಪ, ಮಹಾದೇವ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.