ಬೈಲಹೊಂಗಲ: ರೈತರಿಗೆ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಮಂಗಳವಾರ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದರು.
ಬೈಲವಾಡ ಗ್ರಾಮದಲ್ಲಿ ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಇದೂವರೆಗೆ ಪರಿಹಾರ ಬಂದಿಲ್ಲ. ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮಹಾಬಳೇಶ್ವರ ಪಾಟೀಲ ಮಾತನಾಡಿ, ‘ಬೆಳಗಾವಿ ಜಿಲ್ಲೆಗೆ ₹ 22 ಕೋಟಿ ಬೆಳೆ ಹಾನಿ ಪರಿಹಾರದ ಹಣ ಬಂದಿದೆ. ಆದರೆ ಬೈಲವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಭಾರಿ ಪ್ರಮಾಣದ ಮೋಸ ಮಾಡಲಾಗಿದೆ. ವಿಮಾ ಕಂಪನಿಗಳಿಗೆ ಕೃಷಿ ಅಧಿಕಾರಿಗಳು ಹೆದರುತ್ತಿದ್ದಾರೆ. ಸ್ವತಃ ಜಿಲ್ಲಾಧಿಕಾರಿ ಭೇಟಿ ಮಾತನಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಾದ ದೀಪಕ ಕುಡಸೋಮಣ್ಣವರ, ಶಂಕರ ಸಂಪಗಾಂವ, ಬಸಪ್ಪ ಹೊಸೂರ, ಸಂತೋಷ ಮುದಕನಗೌಡರ, ಸುಭಾಷ ಮುದಕನಗೌಡರ, ಗದಿಗೆಪ್ಪ ಮುದಕನಗೌಡರ, ಬಸವರಾಜ ಮದ್ನಳ್ಳಿ, ಸೋಮಶೇಖರ ಮದ್ನಳ್ಳಿ, ಪ್ರಶಾಂತ ಪಾಟೀಲ, ಬಸವರಾಜ ಗಿರೆಪ್ಪಗೌಡರ, ರಾಜಶೇಖರ ಯಲ್ಲಪ್ಪಗೌಡರ, ಕಾಶಿನಾಥ ಹಿರೇಮಠ, ರುದ್ರಪ್ಪ ಗಾಡದ ಅನೇಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.