ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷಿಕ ಸಮಾಜ ಸಂಘಟನೆ ನೇತೃತ್ವದಲ್ಲಿ ರೈತರು ಸುವರ್ಣ ವಿಧಾನಸೌಧದ ಸಮೀಪ ಕೊಂಡಸಕೊಪ್ಪದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ಅತಿವೃಷ್ಟಿಯಿಂದಾಗಿ, ಮೆಣಸಿನಕಾಯಿ, ಕಡಲೆ, ಭತ್ತ, ಹತ್ತಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಅವರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.
‘ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಹೂವಿನ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಅದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
‘ಕಂದಾಯ ಇಲಾಖೆ ಕಚೇರಿಗಳು ಮತ್ತು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಇದರಿಂದ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದನ್ನು ತಡೆದು ಜನರಿಗೆ ಅನುಕೂಲ ಮಾಡಿಕೊಡಬೇಕು. ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಅಭಿವೃದ್ಧಿ ಕೆಲಸಗಳು ವಿಳಂಬವಾಗುತ್ತಿವೆ. ಕೂಡಲೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಮಹಾಂತೇಶ್ ಕೋಟಗಿ, ಮಾಣಿಕ್ಯ, ಚಂದ್ರಪ್ಪ ಹೊಸಮನಿ, ಬಸವರಾಜ ಸಜ್ಜನ, ಚಿನ್ನಪ್ಪ, ರಮೇಶ ಕೋಳಿವಾಡ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.